Article Image

ಧರ್ಮಸ್ಥಳ: ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ

Article Image

ಧರ್ಮಸ್ಥಳ: ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ

ಉಜಿರೆ: ಚತುರ್ವಿಧ ದಾನಪರಂಪರೆಯೊಂದಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಮಾನವ ಕಲ್ಯಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಾಡುತ್ತಿರುವ ಬಹುಮುಖಿ ಸೇವಾಕಾರ್ಯಗಳು ಆದರ್ಶ ಹಾಗೂ ಅನುಕರಣೀಯವಾಗಿವೆ ಎಂದು ಕೊಡಗು ವಿರಾಜಪೇಟೆಯ ಪೂಜ್ಯ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಧರ್ಮಸ್ಥಳದ ವತಿಯಿಂದ ಬದುಕಿಗೆ ಬೇಕಾದ ಎಲ್ಲಾ ಅವಶ್ಯಕತೆಗಳನ್ನು ಮತ್ತು ಸೌಲಭ್ಯಗಳನ್ನು ಒದಗಿಸಿ ಫಲಾನುಭವಿಗಳ ಸ್ವಾವಲಂಬಿ ಜೀವನಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯವಾಗಿದೆ. ಆಡು ಮುಟ್ಟದ ಸೊಪ್ಪಿಲ್ಲ, ಧರ್ಮಸ್ಥಳದವರು ಕಾರ್ಯ ಮಾಡದ ಸೇವಾ ಕ್ಷೇತ್ರವಿಲ್ಲ. ವ್ಯಸನಮುಕ್ತರು ದೃಢಸಂಕಲ್ಪದಿಂದ ಸಾರ್ಥಕ ಜೀವನ ನಡೆಸಬೇಕು. ಇದು ಅತ್ಯಂತ ಸಂತೋಷ ಮತ್ತು ಸಂಭ್ರಮದ ಸಮಾರಂಭವಾಗಿದ್ದು ವ್ಯಸನಮುಕ್ತರ ಮುಖದಲ್ಲಿರುವ ಮಂದಹಾಸ ಹಾಗೂ ತೃಪ್ತಿ ಆಶಾದಾಯಕವಾಗಿದೆ. ಪೂಜ್ಯ ಹೆಗ್ಗಡೆಯವರು ತಮ್ಮ ಎಲ್ಲಾ ಸೇವಾಕಾರ್ಯಗಳ ಯಶಸ್ಸನ್ನು ದೇವರ ಸೇವೆ ಎಂದೇ ಭಾವಿಸಿ, ಶ್ರೀ ಸ್ವಾಮಿಗೆ ಅರ್ಪಿಸಿ ಧನ್ಯತೆಯನ್ನು ಹೊಂದುತ್ತಾರೆ. ವ್ಯಸನಮುಕ್ತರು ಇಲ್ಲಿಗೆ ಬಂದು ಒಳ್ಳೆಯ ಜ್ಞಾನ ಹಾಗೂ ವಿಚಾರಗಳನ್ನು ಮನದಲ್ಲಿ ತುಂಬಿಕೊಂಡು ಮುಂದೆ ಸಾರ್ಥಕ ಜೀವನ ನಡೆಸಬೇಕು. ಏಕೆಂದರೆ ಇತರ ಕ್ಷೇತ್ರಗಳಲ್ಲಿ ಮಾಡಿದ ಪಾಪಕರ್ಮಗಳು ಪುಣ್ಯಕ್ಷೇತ್ರದಲ್ಲಿ ನಾಶವಾಗುತ್ತವೆ. ಪುಣ್ಯಕ್ಷೇತ್ರದಲ್ಲಿ ಪಾಪ ಮಾಡಿದರೆ ವಜ್ರಲೇಪದಂತೆ ಅದು ಬದುಕಿನಲ್ಲಿ ಶಾಶ್ವತವಾಗಿರುತ್ತದೆ ಎಂದು ಸ್ವಾಮೀಜಿ ಸಲಹೆ ನೀಡಿದರು. ನವಜೀವನ ಪ್ರಶಸ್ತಿ ಪ್ರದಾನ ಮಾಡಿದ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ, ವ್ಯಸನಮುಕ್ತರು ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಂಡು, ತಮ್ಮ ಕೆಲಸವನ್ನು ಸಂತೋಷದಿಂದ ಮಾಡಿ ಗೌರವಯುತ ಹಾಗೂ ನೆಮ್ಮದಿಯ ಜೀವನ ನಡೆಸಬೇಕು ಎಂದು ಹೇಳಿದರು. ವಾರ್ಷಿಕ ವರದಿ ಬಿಡುಗಡೆಗೊಳಿಸಿದ ಹೇಮಾವತಿಯವರು ವೀ. ಹೆಗ್ಗಡೆ ಮಾತನಾಡಿ ಮದ್ಯಪಾನದಂತಹ ದುಶ್ಚಟಗಳಿಂದ ಕೊಲೆ, ಅನ್ಯಾಯ, ಅತ್ಯಾಚಾರ ಹೆಚ್ಚಾಗುತ್ತದೆ. ಮಹಿಳೆಯರ ಜೀವನ ನರಕಯಾತನೆಯಾಗುತ್ತದೆ. ಮಾನವಜನ್ಮ ಶ್ರೇಷ್ಠವಾಗಿದ್ದು ಬುದ್ಧಿ, ವಿವೇಕ ಮತ್ತು ಶಕ್ತಿಯ ಸದುಪಯೋಗ ಮಾಡಿ ಸುಖ-ಶಾಂತಿ, ನೆಮ್ಮದಿಯ ಕುಟುಂಬಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು. ಗ್ರಾಮಾಭಿವೃದ್ಧಿ ಯೋಜನೆಯ ಸಿ.ಇ.ಒ. ಅನಿಲ್ ಕುಮಾರ್ ಮಾತನಾಡಿ ಫಲಾನುಭವಿಗಳ ಕಲ್ಯಾಣಕ್ಕಾಗಿ ಅನುಷ್ಠಾನಗೊಳಿಸಿದ ಯಶಸ್ವಿ ಕಾರ್ಯಕ್ರಮಗಳ ಮಾಹಿತಿ ನೀಡಿದರು. “ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ” ಪ್ರಶಸ್ತಿ: ಹೊನ್ನಾವರದ ಮಂಜುನಾಯ್ಕ, ನಂಜನಗೂಡು ಮಣಿಕಂಠ ಮತ್ತು ಗದಗ ಜಿಲ್ಲೆಯ ನವಲಗುಂದದ ಜಗದೀಶ ಮಲ್ಲಪ್ಪ ಬ್ಯಾಳಿ ಅವರಿಗೆ “ಜಾಗೃತಿ ಅಣ್ಣ” ಹಾಗೂ ಹುಬ್ಬಳ್ಳಿಯ ಸಿದ್ದಪ್ಪ ಕಲ್ಲಪ್ಪ ನೀಲರಗಿ, ಅಥಣಿಯ ಅಂದಾನಿ ದುರದುಂಡೆಪ್ಪ, ಶಿವಮೊಗ್ಗದ ರಮೇಶ್, ಎಸ್.ಎಲ್. ಗದಗದ ಶಿವಾನಂದ ಕುರಿ, ತುಮಕೂರಿನ ರವಿಕುಮಾರ್ ಮತ್ತು ವಿಜಯಪುರದ ಬಬಲೇಶ್ವರ ಸುಭಾಶ್ ಅವರಿಗೆ “ಜಾಗೃತಿ ಮಿತ್ರ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಪಾನಮುಕ್ತರ ಪರವಾಗಿ ಕೂಡ್ಲಿಗಿಯ ಸತೀಶ್ ಮತ್ತು ತುಮಕೂರಿನ ಮಂಜುಳಾ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ವ್ಯಸನಮುಕ್ತರು ದೃಢಸಂಕಲ್ಪದಿಂದ ಇದ್ದು ಮುಂದೆ ಯಾವುದೇ ಆಮಿಷ, ಒತ್ತಡಕ್ಕೆ ಒಳಗಾಗಿ ಮತ್ತೆ ದುಶ್ಚಟಕ್ಕೆ ಬಲಿಯಾಗಬಾರದು. ತಾವು ಸಾರ್ಥಕ ಜೀವನ ನಡೆಸುವುದರೊಂದಿಗೆ, ಇತರ ಮದ್ಯವ್ಯಸನಿಗಳೂ ವ್ಯಸನಮುಕ್ತರಾಗುವಂತೆ ಪ್ರೇರಣೆ, ಸಹಕಾರ ನೀಡಬೇಕು ಎಂದರು. ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಮಾತನಾಡಿ, ಈ ವರೆಗೆ 2063 ಮದ್ಯವರ್ಜನ ಶಿಬಿರಗಳ ಮೂಲಕ 1,38,000 ಮದ್ಯವ್ಯಸನಿಗಳನ್ನು ವ್ಯಸನಮುಕ್ತರಾಗಿ ಪರಿವರ್ತನೆ ಮಾಡಿದ್ದು ಇದಕ್ಕಾಗಿ 75 ಕೋಟಿ ರೂ. ವಿನಿಯೋಗಿಸಲಾಗಿದೆ ಎಂದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ ಬಾದಾಮಿ ಧನ್ಯವಾದವಿತ್ತರು. ಯೋಜನಾಧಿಕಾರಿ ಗಣೇಶ್ ಅಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ಧರ್ಮಸ್ಥಳ: ‘ಶ್ರೀಗಣ’ ಕಿರುಚಿತ್ರ ಬಿಡುಗಡೆ

Article Image

ಧರ್ಮಸ್ಥಳ: ‘ಶ್ರೀಗಣ’ ಕಿರುಚಿತ್ರ ಬಿಡುಗಡೆ

ಧರ್ಮಸ್ಥಳ, ಜೂ. 9: ತುಳುನಾಡಿನ ದೈವ ಆರಾಧನೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ‘ಶ್ರೀಗಣ’ ಕಿರುಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ವೀ. ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಬಿಡುಗಡೆ ಬಳಿಕ ಕಿರುಚಿತ್ರವನ್ನು ವೀಕ್ಷಿಸಿದ ಹೆಗ್ಗಡೆ‌ ದಂಪತಿಗಳು, ತುಳುನಾಡಿನ ಸಾಂಸ್ಕೃತಿಕ ಪರಂಪರೆ ಮತ್ತು ದೈವ ಆರಾಧನೆಯ ಮಹತ್ವವನ್ನು ಪರಿಣಾಮಕಾರಿಯಾಗಿ ಚಿತ್ರಿಸಿರುವ ಯುವಕರ ಪ್ರಯತ್ನವನ್ನು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಧರ್ಮಸ್ಥಳದ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಅವರು ಕಿರುಚಿತ್ರವನ್ನು ವೀಕ್ಷಿಸಿ, ಚಿತ್ರದ ಕಲಾವಿದರು ಹಾಗೂ ತಾಂತ್ರಿಕ ತಂಡಕ್ಕೆ ಶುಭ ಹಾರೈಸಿದರು. ಎಸ್ ಡಿ ಎಂ ಕಲಾಕೇಂದ್ರದ ಪೋಷಕರಾದ ಸೋನಿಯಾ ಯಶೋವರ್ಮರವರು ಕೂಡ ಕಿರು ಚಿತ್ರ ವೀಕ್ಷೀಸಿ ಯುವಕರ ಹೊಸ ಪ್ರಯತ್ನಕ್ಕೆ ಶುಭ ಹಾರೈಸಿದರು. ಸುಮಾರು 15 ನಿಮಿಷಗಳ ಅವಧಿಯ ಈ ಕಿರುಚಿತ್ರವು ತುಳುನಾಡಿನ ದೈವ ಆರಾಧನೆಯ ಹಿನ್ನೆಲೆಯ ಕಥಾವಸ್ತುವನ್ನು ಒಳಗೊಂಡಿದ್ದು, ಯುವಕರು ಮತ್ತು ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿದೆ. ಕಿರುಚಿತ್ರದ ನಿರ್ಮಾಪಕರಾಗಿ ಕಾರ್ತಿಕ್ ಸುಬ್ರಹ್ಮಣ್ಯ, ರಚನೆ ಹಾಗೂ ನಿರ್ದೇಶನವನ್ನು ನೂತನ ಅಮೀನ್, ಕಥೆ ಮತ್ತು ಸಂಭಾಷಣೆಯನ್ನು ಸುಜಿತ್ ಸೂರ್ಯ ನಿರ್ವಹಿಸಿದ್ದಾರೆ. ಭೂಷಣ್ ಪೂಜಾರಿ ಸಂಗೀತ ಸಂಯೋಜನೆ ಮಾಡಿದ್ದು, ಸಮರ್ಥನ್ ರಾವ್ ಹಿನ್ನೆಲೆ ಸಂಗೀತವನ್ನು ನೀಡಿದ್ದಾರೆ. ಗಗನ್ ರಾಜ್ ಛಾಯಾಗ್ರಹಣ ಹಾಗೂ ಸಂಕಲನದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಚಿತ್ರದಲ್ಲಿ ಸುಬ್ರಹ್ಮಣ್ಯದ ಸ್ಥಳಿಯರಾದ ರೋಹಿತ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದು, ಕಾರ್ತಿಕ್ ಶೋಬಿತ್, ಕಿರಣ್, ಜಯರಾಮ್ , ರಾಜಾರಾಮ್ ಹಾಗೂ ಇತರರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಿರುಚಿತ್ರದ ನಿರ್ಮಾಣದಲ್ಲಿ ಸುನಿಲ್ ಶೆಟ್ಟಿ ಕಲ್ಕೊಪ್ಪ ಹಾಗೂ ಯಶವಂತ್ ಬೆಳ್ತಂಗಡಿ (ನೀನಾಸಂ) ಅವರು ಸಲಹೆ ಮತ್ತು ಸಹಕಾರ ನೀಡಿದ್ದು, ಯುವ ಕಲಾವಿದರ ಈ ಪ್ರಯತ್ನಕ್ಕೆ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ಒದಗಿಸಿದ್ದಾರೆ. ಯುವಕರ ಸೃಜನಶೀಲತೆ, ಸಾಂಸ್ಕೃತಿಕ ಬದ್ಧತೆ ಮತ್ತು ತುಳುನಾಡಿನ ಪರಂಪರೆಯ ಮೇಲಿನ ಅಭಿಮಾನವನ್ನು ಪ್ರತಿಬಿಂಬಿಸುವ ‘ಶ್ರೀಗಣ’ ಕಿರುಚಿತ್ರವು ಕುಕ್ಕೆಶ್ರಿ ಕ್ರೀಯೇಷನ್ಸ್ ಎಂಬ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗುತ್ತಿದೆ.

ವಿಶ್ವ ಬೈಸಿಕಲ್ ದಿನಾಚರಣೆ ಮತ್ತು ಪರಿಸರ ದಿನಾಚರಣೆ

Article Image

ವಿಶ್ವ ಬೈಸಿಕಲ್ ದಿನಾಚರಣೆ ಮತ್ತು ಪರಿಸರ ದಿನಾಚರಣೆ

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯ ಹಾಗೂ ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಜಂಟಿಯಾಗಿ ‘ವಿಶ್ವ ಬೈಸಿಕಲ್ ದಿನಾಚರಣೆ’ ಮತ್ತು ‘ವಿಶ್ವ ಪರಿಸರ ದಿನಾಚರಣೆ’ಯನ್ನು ಆಚರಿಸಿದವು. ಇದರೊಂದಿಗೆ ಹುಬ್ಬಳ್ಳಿ ಬೈಸಿಕಲ್ ಕ್ಲಬ್‌ನ ಹತ್ತನೇ ವರ್ಷದ ಯಶಸ್ವಿ ದಶಮಾನೋತ್ಸವ ಸಂಭ್ರಮಾಚರಣೆಯನ್ನು ಜೂ. 7ರಂದು ಅತ್ಯಂತ ಸಡಗರದಿಂದ ಆಚರಿಸಲಾಯಿತು.​ಭಾರತದ ಮೊದಲ ಕ್ಯಾನ್ಸರ್ ಮುಕ್ತ ಸಾಧಕ ಟ್ರಯಾಥ್ಲೆಟ್ ಹಾಗೂ ಐರನ್‌ಮ್ಯಾನ್ (Ironman) ಪ್ರಶಸ್ತಿ ವಿಜೇತರಾದ ಡಾ. ಮಯೂರಾ ಶಿವಾಲ್ಕರ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ​ಈ ವಿಶೇಷ ಸಂದರ್ಭದ ಅಂಗವಾಗಿ ಎಸ್‌ಡಿಎಂ ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗಾಗಿ 10 ಕಿಲೋಮೀಟರ್ ಉದ್ದದ ಸೈಕಲ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ಮತ್ತು ಪರಿಸರ ಜಾಗೃತಿ ಮೂಡಿಸುವ ಈ ರ‍್ಯಾಲಿಯಲ್ಲಿ ವಿಶ್ವವಿದ್ಯಾಲಯದ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಹುಬ್ಬಳ್ಳಿ ಬೈಸಿಕಲ್ ಕ್ಲಬ್‌ನ ಸದಸ್ಯರು ಸೇರಿದಂತೆ 120ಕ್ಕೂ ಹೆಚ್ಚು ಸೈಕಲ್ ಸವಾರರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. ಇದೇ ವೇಳೆ ಹುಬ್ಬಳ್ಳಿ ಬೈಸಿಕಲ್ ಕ್ಲಬ್‌ನ ಸಾಧಕರಿಗೆ, ಗಣ್ಯರು ಪ್ರಶಸ್ತಿ ಹಾಗೂ ಬಹುಮಾನಗಳನ್ನು ವಿತರಿಸಿದರು.​ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಚಾರ್ಯರಾದ ಡಾ. ವಿಜಯ್ ಕೆ. ಕುಲಕರ್ಣಿ, ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ್ ಹೆಗಡೆ ಮತ್ತು ಸಂಘಟನಾ ಕಾರ್ಯದರ್ಶಿಯಾದ ಡಾ. ಮಹಾಂತೇಶ್ ಮಟ್ಟಿ ಮತ್ತಿತರರು ಉಪಸ್ಥಿತರಿದ್ದರು.​ಹುಬ್ಬಳ್ಳಿ ಬೈಸಿಕಲ್ ಕ್ಲಬ್‌ನ ಅಧ್ಯಕ್ಷರಾದ ಶೆಟ್ಟೆಪ್ಪ ಪಿರಂಗಿ ಅವರು ಸ್ವಾಗತಿಸಿದರು. ಹುಬ್ಬಳ್ಳಿ ಬೈಸಿಕಲ್ ಕ್ಲಬ್‌ನ ಕಾರ್ಯದರ್ಶಿಯಾದ ಶಿವಾನಂದ ದಂಡವತಿಮಠ ಅವರು ವಂದನಾರ್ಪಣೆ ಮಾಡಿದರು. ಡಾ. ವೈಷ್ಣವಿ ಮತ್ತು ಡಾ. ಅನಘಾ ಕಾರ್ಯಕ್ರಮವನ್ನು ನಿರೂಪಿಸಿದರು.

ಧರ್ಮಸ್ಥಳ: ಭಾರತದ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಭೇಟಿ

Article Image

ಧರ್ಮಸ್ಥಳ: ಭಾರತದ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಭೇಟಿ

ಧರ್ಮಸ್ಥಳ, ಮೇ 31: ಭಾರತದ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು. ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳು ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ ಅವರು ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಹಾಗೂ ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಉಪರಾಷ್ಟ್ರಪತಿಗಳು ಕೆಲಕಾಲ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಕ್ಷೇತ್ರದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ಪಡೆದ ಅವರು, ಕ್ಷೇತ್ರವು ಸಮಾಜಮುಖಿ ಸೇವೆಯಲ್ಲಿ ಸಲ್ಲಿಸುತ್ತಿರುವ ಕೊಡುಗೆಯನ್ನು ಶ್ಲಾಘಿಸಿದರು. ಭೇಟಿಯ ಸಂದರ್ಭದಲ್ಲಿ ಹೆಗ್ಗಡೆಯವರ ಕುಟುಂಬ ಸದಸ್ಯರೂ ಕರ್ನಾಟಕ ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಡಿ. ಶ್ರೇಯಸ್ ಕುಮಾರ್ ಹಾಗೂ ಅಮಿತ್ ಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಉಜಿರೆ: ಎಸ್‌.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಗ್ಗಿ ವಾಹನದ ಸೇವೆ

Article Image

ಉಜಿರೆ: ಎಸ್‌.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಗ್ಗಿ ವಾಹನದ ಸೇವೆ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಯಲು ಕಷ್ಟಪಡುವ ರೋಗಿಗಳಿಗೆ ಬಗ್ಗಿ ವಾಹನದ ಸೇವೆ ಇನ್ನು ಮುಂದೆ ವಯೋವೃದ್ಧರಿಗೆ ಮತ್ತು ಅಶಕ್ತರಿಗೆ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹೊರ ಆವರಣದೊಳಗೆ ಸಂಚರಿಸಲು ಬಗ್ಗಿ ವಾಹನದ ಸೇವೆ ಲಭ್ಯವಿರಲಿದೆ. ಪರಿಸರ ಸ್ನೇಹಿ ಮತ್ತು ಶಬ್ದ ರಹಿತ ವಾಹನ ಇದಾಗಿದ್ದು, ನಡೆಯಲು ಕಷ್ಟ ಪಡುವವರಿಗೆ ಆಸ್ಪತ್ರೆಯ ಹೊರ ಆವರಣದಲ್ಲಿ ಸಂಚರಿಸಲು ಇದು ಬಹು ಉಪಯುಕ್ತವಾಗಿದೆ. 4.65 ಲಕ್ಷ ಮೌಲ್ಯದ ಈ ವಾಹನವನ್ನು ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿನವರು ಉಚಿತವಾಗಿ ನೀಡಿದ್ದು, ಬ್ಯಾಂಕ್ ಆಫ್ ಬರೋಡಾ ಇದರ ಪ್ರಾದೇಶಿಕ ಮೇನೇಜರ್ ಗಣೇಶ್ ಉಜಿನ ಮತ್ತು ಜನರಲ್ ಮೆನೇಜರ್ ರಾಜೇಶ್ ಖನ್ನಾ ಇವರು ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಬಗ್ಗಿ ವಾಹನದ ಕೀಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು, ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿನ ಉಜಿರೆ ಶಾಖೆಯ ಮೇನೇಜರ್ ಶಿವರಾಮ ಹಾಗೂ ಧರ್ಮಸ್ಥಳ ಶಾಖೆಯ ಮೆನೇಜರ್ ಚೈತನ್ಯಾನಂದ ಎನ್ ಉಪಸ್ಥಿತರಿದ್ದರು.

ಎಕ್ಸೆಲ್ ಕಾಲೇಜಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನ ರಾಯಭಾರಿ ರಮೇಶ್ ಅರವಿಂದ್ ಭೇಟಿ

Article Image

ಎಕ್ಸೆಲ್ ಕಾಲೇಜಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನ ರಾಯಭಾರಿ ರಮೇಶ್ ಅರವಿಂದ್ ಭೇಟಿ

ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನ ರಾಯಭಾರಿ ರಮೇಶ್ ಅರವಿಂದ್ ಅವರನ್ನು ಬೆಳ್ತಂಗಡಿ ಶಾಖಾ ಪ್ರಬಂಧಕರಾದ ಲೋಹಿತ್ ಕುಮಾರ್ ಹಾಗೂ ಸಿಬ್ಬಂದಿ ಶಿವರಾಜ್‌ರವರು, ಎಕ್ಸೆಲ್ ಕಾಲೇಜ್‌ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಇವರ ಸಮ್ಮುಖದಲ್ಲಿ ಹೂಗುಚ್ಛ ನೀಡಿ ಗೌರವಿಸಲಾಯಿತು.

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿಧಿ 2 ಕೋಟಿ ಕಾಮಗಾರಿ ಶಿಲಾನ್ಯಾಸ ಮತ್ತು ಸಿರಿ ಕೆಫೆ-ಸಿರಿ ಮಳಿಗೆ ಉದ್ಘಾಟನೆ

Article Image

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿಧಿ 2 ಕೋಟಿ ಕಾಮಗಾರಿ ಶಿಲಾನ್ಯಾಸ ಮತ್ತು ಸಿರಿ ಕೆಫೆ-ಸಿರಿ ಮಳಿಗೆ ಉದ್ಘಾಟನೆ

ಬೆಳ್ತಂಗಡಿ: ಗ್ರಾಮದ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಬಗ್ಗೆ ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಇದರಂತೆ ಇಲ್ಲಿಂದ 800 ಕಿ.ಮೀ. ದೂರದ ಬೀದರ್ ಜಿಲ್ಲೆಯ ಸ್ಥಿತಿ ಕುರಿತು ಮಾಹಿತಿ ದೊರೆತ ಕಾರಣ ಅಲ್ಲಿಯ ಜನರ ಜೀವನ ಸುಧಾರಣೆ ಅಗಬೇಕು ಎಂದು ನನ್ನ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೀದರ್ ಜಿಲ್ಲೆಗೆ ಹೈನುಗಾರಿಕೆಗೆ 10 ಕೋಟಿ ರೂ. ಬಳಕೆ ಮಾಡಿದ್ದು ಇದರಿಂದ ನಿತ್ಯ 18 ಸಾವಿರ ಲೀಟರ್ ಉತ್ಪತ್ತಿಯಾಗುತ್ತಿದ್ದ ಹಾಲು ಪ್ರಸ್ತುತ ಒಂದು ಲಕ್ಷದ ನಲುವತ್ತು ಸಾವಿರ ಲೀಟರ್ ಹಾಲು ಉತ್ಪತ್ತಿಯಾಗುತ್ತಿದೆ. ಇದರಿಂದ ಜನರ ಜೀವನ ಮಟ್ಟ ಸುಧಾರಣೆಯಾಗಿದೆ. ಇದೇ ರೀತಿ ಜನರ ಜೀವನ ಮಟ್ಟ ಸುಧಾರಣೆ ಅಗತ್ಯತೆ ಮನಗಂಡು ಮುಂದೆಯೂ ರಾಜ್ಯಸಭಾ ನಿಧಿ ಬಳಸಲಾಗುವುದು ಎಂದು ರಾಜ್ಯಸಭಾ ಸಂಸದ, ಶ್ರಿ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಸೋಮವಾರ ರಾಜ್ಯಸಭಾ ಸಂಸದರಾದ ಡಾ.‌ ವೀರೇಂದ್ರ ಹೆಗ್ಗಡೆಯವರ ಪ್ರದೇಶಾಭಿವೃದ್ಧಿ ನಿಧಿಯಡಿ ಮಂಜೂರುಗೊಂಡಿರುವ ರೂ. 2 ಕೋ.ರೂ. ಅನುದಾನದಡಿ ಬೆಳ್ತಂಗಡಿ ನಗರದ ಕೆಇಬಿ-ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ-ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡುತ್ತಾ, ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದಕ್ಕಾಗಿ ತಾಲೂಕಿನ ಕೆಲವು ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಗೆ ರಾಜ್ಯಸಭಾ ನಿಧಿಯನ್ನು ಬಳಸಲಾಗಿದೆ. ಗ್ರಾಮಾಭಿವೃದ್ದಿ ಯೋಜನೆಯಿಂದ ಸಾವಿರಾರು ಕುಟುಂಬಗಳಿಗೆ ಬೆಳಕು ಬಂದರೆ, ಸಿರಿ ಸಂಸ್ಥೆಯಿಂದ ಸಾವಿರಾರು ಮಂದಿಗೆ ಉದ್ಯೋಗ ದೊರಕಿದೆ. ಮುಂದೆಯೂ ಇನ್ನಷ್ಟು ಉತ್ಪನ್ನಗಳನ್ನು ತಯಾರಿಸಿ ಮೂರು ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗ ಸಿಗುವಂತೆ ಮಾಡಲಾಗುವುದು. ಇಲ್ಲಿನ ಶಾಸಕರ, ಪಟ್ಟಣ ಪಂಚಾಯಿತಿ ಅಧ್ಯಕ್ಷರ ,ಸದಸ್ಯರ ಬೇಡಿಕೆಯಂತೆ ಜನರ ಅನುಕೂಲಕ್ಕಾಗಿ ಈ ರಸ್ತೆಗೆ 2 ಕೋಟಿ ರೂ. ಅನುದಾನ ನೀಡಲಾಗಿದೆ ಎಂದರು. ಶಾಸಕ‌ ಹರೀಶ್ ಪೂಂಜ ಅವರು ಮಾತನಾಡಿ, ಡಾ ಹೆಗ್ಗಡೆಯವರು ತಮ್ಮ ರಾಜ್ಯಸಭಾ ನಿಧಿಯಡಿ ಬೆಳ್ತಂಗಡಿ ಅಯ್ಯಪ್ಪ ಮಂದಿರ ಬಳಿಯಿಂದ ಹುಣ್ಸೆಕಟ್ಟೆ ವರೆಗಿನ ರಸ್ತೆ ಅಭಿವೃದ್ದಿಗೆ 2 ಕೋಟಿ ರೂ. ನೀಡುವ ಮೂಲಕ ಉಪ್ಪಿನಂಗಡಿ- ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ಗುರುವಾಯನಕರೆಯಲ್ಲಿ ಟ್ರಾಫಿಕ್ ಸಮಸ್ಯೆ ಬಂದಾಗ ಈ ಸಂಪರ್ಕ ರಸ್ತೆ ಸಾವಿರಾರು ಜನರಿಗೆ ಅನುಕೂಲವಾಗಿದೆ. ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ ಡಾ ಹೆಗ್ಗಡೆಯವರು ತಮ್ಮ ರಾಜ್ಯಸಭಾ ನಿಧಿಯಿಂದ 10 ಕೋಟಿ ರೂ. ಅನುದಾನ ನೀಡಿ ಸಾವಿರಾರು ಕುಟುಂಬಗಳ ಆರ್ಥಿಕ ಬೆಳವಣಿಗೆ ಕಾರಣವಾಗಿದ್ದಾರೆ. ಇದರಿಂದ ದೇಶದಲ್ಲಿ ಸಂಸದರ ನಿಧಿ ವಿನಿಯೋಗ ಹೇಗೆ ಮಾಡಬಹುದೆಂದು ಡಾ. ಹೆಗ್ಗಡೆಯವರು ಕೆಲಸ ಮಾಡಿ ತೋರಿಸಿಕೊಟ್ಟು ಮಾದರಿಯಾಗಿದ್ದಾರೆ. ಸಿರಿ ಸಂಸ್ಥೆಯಲ್ಲಿ ಒಂದು ಸಾವಿರ ಸಿಬ್ಬಂದಿಗಳು ಇದ್ದಾರೆ. ಮಹಿಳೆಯರಿಗೆ ಉದ್ಯೋಗ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ. ಪಟ್ಟಣ ಪಂಚಾಯತ್ ಗೆ ಅನುದಾನಗಳ ಕೊರತೆ ಇದ್ದ ಸಂದರ್ಭದಲ್ಲಿ ರಸ್ತೆಗೆ ಎರಡು ಕೋಟಿ ಅನುದಾನ ನೀಡಿ ನಗರ ಪಂಚಾಯತ್ ಗೆ ಶಕ್ತಿ ತುಂಬಿದ್ದಾರೆ. ಇದಕ್ಕಾಗಿ ಪಟ್ಟಣ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಾರ್ವಜನಿಕರ ಪರವಾಗಿ ಡಾ.ಹೆಗ್ಗಡೆಯವರಿಗೆ ಅಭಿನಂದಿಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಉದ್ಯಮಿ ಶಶಿಧರ ಶೆಟ್ಟಿ ಬರೋಡ, ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಧ. ಗ್ರಾ. ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್. ಎಸ್., ಸಿರಿ ಸಂಸ್ಥೆ ಟ್ರಸ್ಟಿ ರಾಜೇಶ್ ಪೈ ಉಜಿರೆ, ಪ.ಪಂ.‌ ಮುಖ್ಯಾಧಿಕಾರಿ ರಾಜೇಶ್, ಸಿರಿ ಸಂಸ್ಥೆ ಸಿಇಒ ಪ್ರಸನ್ನ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್. ಜನಾರ್ದನ್ ಪ್ರಸ್ತಾವಿಸಿ, ಸ್ವಾಗತಿಸಿದರು. ಸಿರಿ ಗೋದಾಮು ವಿಭಾಗದ ಮ್ಯಾನೇಜರ್ ಜೀವನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಕರ್ಣಾಟಕ ಬ್ಯಾಂಕ್ ಎಂ.ಡಿ, ಸಿಇಒ ಭೇಟಿ

Article Image

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಕರ್ಣಾಟಕ ಬ್ಯಾಂಕ್ ಎಂ.ಡಿ, ಸಿಇಒ ಭೇಟಿ

ಉಜಿರೆ : ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಜಿರೆಯ ಕೇಂದ್ರ ಕಛೇರಿಗೆ ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಘವೇಂದ್ರ ಶ್ರೀನಿವಾಸ ಭಟ್ ಭೇಟಿ ನೀಡಿದರು. ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಘವೇಂದ್ರ ಶ್ರೀನಿವಾಸ ಭಟ್ ರವರಿಗೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅಭಿನಂದಿಸಿದರು. ಈ ವೇಳೆ ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ವಾದಿರಾಜ ಭಟ್, ಉಡುಪಿ ರಥಬೀದಿ ಶಾಖೆಯ ಹಿರಿಯ ಪ್ರಬಂಧಕ ಪ್ರಶಾಂತ್ ಎಂ. ರಾವ್ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿ ಹಣಕಾಸು ಅಧಿಕಾರಿ ಅರವಿಂದ್ ಭಗವತ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರಾಘವೇಂದ್ರ ಶ್ರೀನಿವಾಸ ಭಟ್ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಕ್ಕೊ ಬೆಳೆಯ ವಿಚಾರ ವಿನಿಮಯ

Article Image

ಕೊಕ್ಕೊ ಬೆಳೆಯ ವಿಚಾರ ವಿನಿಮಯ

ಮೂಡುಬಿದಿರೆ ಕೃಷಿ ವಿಚಾರ ವಿನಿಮಯ ಕೇಂದ್ರದಿಂದ ಕೊಕ್ಕೋ ಬೆಳೆಯಲ್ಲಿ ಸುಧಾರಿತ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಸಮಾಜ ಮಂದಿರದಲ್ಲಿ ಅಕ್ಟೋಬರ್ 4 ರಂದು ನಡೆದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಕೋಲಾರದ ಡಾ. ರಶ್ಮಿ ಆರ್ ಅವರು ಮಾತನಾಡಿ ಮಳೆಯ ನೀರಿನೊಂದಿಗೆ ಕೊಚ್ಚಿ ಹೋಗುವ ಮೇಲ್ಮಣ್ಣನ್ನು ಉಳಿಸಿಕೊಂಡಲ್ಲಿ ಫಲವನ್ನು ಹೆಚ್ಚಿಸಬಹುದಾಗಿದೆ. ಕೊಕ್ಕೋ ನಾಟಿಗೆ ಕನಿಷ್ಠ 18 ಫೀಟುಗಳ ಅಂತರ ಇರತಕ್ಕದ್ದು ಅಗತ್ಯ ಇರುವ ರಸಸಾರವನ್ನು ಒದಗಿಸಿ ಬೆಳೆಯನ್ನು ಹೆಚ್ಚಿಸಿಕೊಳ್ಳಬಹುದು ಎಂದರು. ಕಾರ್ಯಕ್ರಮವನ್ನು ದೀಪ ಬೆಳಗಿಸಿದ ಪ್ರಭಾತ್ ಸಿಲ್ಕ್ಸ್ ಮಾಲೀಕ ಪ್ರಭಾ ಚಂದ್ರ ಜೈನ್ ಕೃಷಿಗೆ ಪ್ರಾಣಿಗಳ ಉಪಟಳ ಇದ್ದರೂ, ಉತ್ತಮ ಆರೋಗ್ಯಕ್ಕೆ ಹಟ್ಟಿ ಗೊಬ್ಬರದಿಂದ ಬೆಳೆದ ಬೆಳೆ ಹೆಚ್ಚು ಪರಿಣಾಮಕಾರಿ ಎಂದು ನೆನಪಿಸಿದರು. ಕೃಷಿ ಕೇಂದ್ರದ ಅಧ್ಯಕ್ಷ ಅಭಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮಿಜಾರು ಹೊಸ ಮನೆ ವಿನಯ್ ಕುಮಾರ್ ಹಾಜರಿದ್ದರು. ಗುಣಪಾಲ ಮುದ್ಯ ಸ್ವಾಗತಿಸಿದರು. ಸದಾನಂದ ನಾರಾವಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಹರೀಶ್ ಕೋಟ್ಯಾನ್ ವರದಿ ಮಂಡಿಸಿದರು. ಲಿಡ್ವಿನ್ ಡಿ ಕೋಸ್ತ ವಂದಿಸಿದರು.

ಅಮ್ಮ ಪ್ರಶಸ್ತಿಗೆ ಕೃತಿಗಳ ಆಹ್ವಾನ

Article Image

ಅಮ್ಮ ಪ್ರಶಸ್ತಿಗೆ ಕೃತಿಗಳ ಆಹ್ವಾನ

ಪತ್ರಕರ್ತ, ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್ ತಮ್ಮ ತಾಯಿ ಸ್ಮರಣಾರ್ಥ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ 25ನೇ ವರ್ಷದ 'ಅಮ್ಮ ಪ್ರಶಸ್ತಿ'ಗಾಗಿ 2024 ಮತ್ತು 2025ನೇ ಸಾಲಿನಲ್ಲಿ ಪ್ರಕಟವಾದ ಕೃತಿ ಆಹ್ವಾನಿಸಲಾಗಿದೆ. 24 ವರ್ಷಗಳಿಂದ ನಿರಂತರ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಲಾಗುತ್ತಿರುವ ಅಮ್ಮ ಪ್ರಶಸ್ತಿಗೆ ಈಗ 25ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ಪ್ರತಿಷ್ಠಿತ 'ಅಮ್ಮ ಪ್ರಶಸ್ತಿ'ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿ ಕೃತಿಗಳ ಆಹ್ವಾನ ಕಳುಹಿಸಬಹುದು. ಆಯ್ಕೆಯಾದ 5 ಕೃತಿಗಳಿಗೆ ತಲಾ 5 ಸಾವಿರ ನಗದು ಪುರಸ್ಕಾರ ಮತ್ತು ಸನ್ಮಾನ, ಗೌರವದ ಕಾಣಿಕೆ ನೀಡಿ ಸತ್ಯ ರಿಸಲಾಗುವುದು. ಕೃತಿಗಳನ್ನು ಸ್ವೀಕರಿಸಲು 'ಅ.30 ಕೊನೆಯ ದಿನಾಂಕವಾಗಿದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೃತಿಗಳನ್ನು ರತ್ನಕಲಾ ಮಹಿಪಾಲರೆಡ್ಡಿ ಮುನ್ಸೂರ್, ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂ‌ ಪ್ರತಿಷ್ಠಾನ 'ಅಮ್ಮ ನಿಲಯ', ರಾಮಚಂದ್ರ ಲೇಔಟ್, ಪಿಡಬ್ಲ್ಯುಡಿ ಕಚೇರಿ ಹತ್ತಿರ, ಸೇಡಂ-585 222. ಕಲಬುರಗಿ ಜಿಲ್ಲೆ ಈ ವಿಳಾಸಕ್ಕೆ ಕಳಿಸಬೇಕು.

ಸಿರಿ ಕೇಂದ್ರ ಕಛೇರಿಗೆ ಡಿ. ವೀರೇಂದ್ರ ಹೆಗ್ಗಡೆ ದಂಪತಿ ಭೇಟಿ

Article Image

ಸಿರಿ ಕೇಂದ್ರ ಕಛೇರಿಗೆ ಡಿ. ವೀರೇಂದ್ರ ಹೆಗ್ಗಡೆ ದಂಪತಿ ಭೇಟಿ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಂಸ್ಥಾಪಕರು ಹಾಗೂ ಸಿರಿ ಆಡಳಿತ ಮಂಡಳಿಯ ಅಧ್ಯಕ್ಷರೂ ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಸಿರಿ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರಾಗಿರುವ ಹೇಮಾವತಿ ವೀ. ಹೆಗ್ಗಡೆಯವರು ಇತ್ತೀಚೆಗೆ ಬೆಳ್ತಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಸಿರಿ ಕೇಂದ್ರ ಕಛೇರಿಗೆ ಭೇಟಿ ನೀಡಿದರು. ಸಿರಿ ಸಂಸ್ಥೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಹೆಗ್ಗಡೆ ದಂಪತಿಗಳು, ಇಲ್ಲಿ ನಡೆಯುತ್ತಿರುವ ವಿವಿಧ ಉತ್ಪನ್ನಗಳ ಉತ್ಪಾದನಾ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ನವರಾತ್ರಿ ಹಬ್ಬದ ಈ ವಿಶೇಷ ಸಂದರ್ಭದಲ್ಲಿ ಸಿಬ್ಬಂದಿಗಳನ್ನುದ್ದೇಶಿಸಿ ಮಾತನಾಡಿದ ಅವರು ನವರಾತ್ರಿಯು ಶಕ್ತಿ, ಬುದ್ಧಿವಂತಿಕೆ, ಧೈರ್ಯ, ಭಕ್ತಿ ಮತ್ತು ರಕ್ಷಣೆಯಂತಹ ವಿಭಿನ್ನ ಗುಣಗಳ ಸ್ವರೂಪವಾಗಿರುವ ನವದುರ್ಗೆಯರ ಪೂಜೆಗೆ ಸಮರ್ಪಿತವಾಗಿದೆ. ಸಿರಿಯಲ್ಲಿ ದುಡಿಯುವ ಮಹಿಳೆಯರು ಕೂಡಾ ಸಿರಿಯ ಶಕ್ತಿ ಸ್ವರೂಪಿಣಿಯರಾಗಿದ್ದು, ಎಲ್ಲರೂ ಶ್ರದ್ಧೆ, ಪ್ರಾಮಾಣಿಕತೆಯಿಂದ ದುಡಿದು ಸಿರಿ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸಿ, ಮುನ್ನಡೆಸುವ ಮೂಲಕ ಇನ್ನೂ ಸಹಸ್ರಾರು ಸಂಖ್ಯೆಯಲ್ಲಿ ಮಹಿಳೆಯರಿಗೆ ಉದ್ಯೋಗ ದೊರೆತು ನೆಮ್ಮದಿಯ ಜೀವನ ನಡೆಸುವಂತಾಗಲಿ, ಎಲ್ಲರಿಗೂ ನವದುರ್ಗೆಯರ ಆಶೀರ್ವಾದವಿರಲಿ ಎಂದು ಶುಭ ಹಾರೈಸಿದರು. ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕರಾದ ಕೆ.ಎನ್ ಜನಾರ್ಧನರವರು ಹೆಗ್ಗಡೆ ದಂಪತಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಎಲ್ಲಾ ಸಿರಿ ಸಿಬ್ಬಂದಿಗಳ ಪರವಾಗಿ ಗೌರವಾರ್ಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರಾದ ರಾಜೇಶ್ ಪೈ, ಸಿರಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಮಹಾವೀರ ಅಜ್ರಿ, ಸಿರಿ ಸಂಸ್ಥೆಯ ಆಡಳಿತ ಮತ್ತು ಲೆಕ್ಕಪತ್ರ ವಿಭಾಗದ ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ, ಮಾರುಕಟ್ಟೆ ವಿಭಾಗ ಮತ್ತು ವಿವಿಧ ಉತ್ಪಾದನಾ ವಿಭಾಗಗಳ ಮೇಲಾಧಿಕಾರಿಗಳು, ಮೇಲ್ವಿಚಾರಕರು, ಗೋದಾಮು ಪ್ರಬಂಧಕರು ಹಾಗೂ ಸಿರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆಳ್ವಾಸ್ ಕಾಲೇಜಿನಲ್ಲಿ ಮಾಯಾಚಕ್ರ ಕಿರುಚಿತ್ರದ ಪ್ರೀಮಿಯರ್ ಪ್ರದರ್ಶನ

Article Image

ಆಳ್ವಾಸ್ ಕಾಲೇಜಿನಲ್ಲಿ ಮಾಯಾಚಕ್ರ ಕಿರುಚಿತ್ರದ ಪ್ರೀಮಿಯರ್ ಪ್ರದರ್ಶನ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಗೌರವ್ ಹೆಗ್ಡೆ ನಿರ್ದೇಶನದ ಕಿರುಚಿತ್ರ ‘ಮಾಯಾಚಕ್ರ’ದ ಪ್ರೀಮಿಯರ್ ಷೋ ಆಳ್ವಾಸ್ ಕಾಲೇಜಿನ ರಾಷ್ಟ್ರೀ ಯ ಸೇವಾ ಯೋಜನೆಯ ಸಹಯೋಗದಲ್ಲಿ ಕಾಲೇಜಿನ ಆಡಿಯೋ ವೀಡಿಯೋ ಥಿಯೇಟರ್‌ನಲ್ಲಿ ನಡೆಯಿತು. ಕಿರುಚಿತ್ರ ವೀಕ್ಷಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಗೌರವ್ ಹೆಗ್ಡೆ ಮತ್ತು ಅವರ ತಂಡದ ಚೊಚ್ಚಲ ಪ್ರಯತ್ನವನ್ನು ಶ್ಲಾಘಿಸಿದರು. ಎಳವೆಯಲ್ಲಿಯೇ ಇಂತಹ ಸೃಜನಾತ್ಮಕ ಕಾರ್ಯಗಳನ್ನು ಕೈಗೊಳ್ಳುವುದು ಸಮಾಜಕ್ಕೆ ಪ್ರೇರಣಾದಾಯಕ. ತನಿಖಾ ಪತ್ರಿಕೋದ್ಯಮದ ಕಥಾಹಂದರ ಹೊಂದಿರುವ ಈ ಕಿರುಚಿತ್ರವು, ಪತ್ರಕರ್ತರು ವೃತ್ತಿಜೀವನದಲ್ಲಿ ಎದುರಿಸಬೇಕಾಗುವ ತೊಂದರೆಗಳು, ಸವಾಲುಗಳು ಮತ್ತು ಸಮಾಜದ ಒತ್ತಡಗಳ ನೈಜ ಚಿತ್ರಣವನ್ನು ನೀಡುತ್ತದೆ. ‘ಮಾಯಾಚಕ್ರ’ದ ಇನ್ನೊಂದು ವಿಶೇಷತೆ, ಚಿತ್ರದಲ್ಲಿ ಸ್ಥಳೀಯ ಸ್ಥಳಗಳು ಮತ್ತು ಪ್ರತಿಭೆಗಳನ್ನು ಬಳಸಿರುವುದು. ಈ ಮೂಲಕ ಗ್ರಾಮೀಣ ಸೌಂದರ್ಯವನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ, ಪ್ರತಿಭಾವಂತರಿಗೆ ತಮ್ಮ ನಟನಾ ಕೌಶಲ್ಯವನ್ನು ತೋರಿಸಲು ವೇದಿಕೆ ಒದಗಿಸಲಾಗಿದೆ ಎಂದರು. ಸಿನಿಮಾದ ನಿರ್ದೇಶಕ ಗೌರವ್ ಹೆಗ್ಡೆ ಮಾತನಾಡಿ, “ಈಗಿನ ರೀಲ್ಸ್ ಜಮಾನದಲ್ಲಿ ದೀರ್ಘ ಅವಧಿಯ ಕಿರುಚಿತ್ರಗಳ ಮೂಲಕ ಪ್ರೇಕ್ಷಕರನ್ನು ಸೆಳೆಯುವುದು ಒಂದು ಸವಾಲಿನ ಕೆಲಸ. ಆ ಅಂಶವನ್ನು ಮನದಲ್ಲಿ ಇಟ್ಟುಕೊಂಡು, ನಾವು ಸುಮಾರು ಅರ್ಧ ಗಂಟೆಯ ಅವಧಿಯ ಸಿನಿಮಾವನ್ನು ತಯಾರಿಸಿದ್ದೇವೆ. ಈ ಕಿರುಚಿತ್ರದ ಮೂಲಕ ಸಾಮಾನ್ಯ ಜನರ ಹಕ್ಕನ್ನು ಪ್ರಶ್ನಿಸಲು ಮುಂದಾದ ಒಬ್ಬ ಪತ್ರಕರ್ತೆಯ ಧೈರ್ಯ, ಸತ್ಯಕ್ಕಾಗಿ ಹೋರಾಟ ಮತ್ತು ಆ ಹೋರಾಟದ ವಿರುದ್ಧ ಬಲಿಷ್ಠ ಲಾಬಿ ಹೇಗೆ ಪ್ರತಿಕ್ರಿಯಿಸಿತು ಎಂಬುದನ್ನು ತಿಳಿಸಲಾಗಿದೆ. ಮಾಧ್ಯಮದ ಜವಾಬ್ದಾರಿ, ಸಮಾಜದಲ್ಲಿ ಬೇರೂರಿರುವ ಅಸಮರ್ಪಕ ಪದ್ಧತಿಗಳ ವಿರುದ್ಧ ಧೈರ್ಯದಿಂದ ನಿಲ್ಲುವ ಅಗತ್ಯ ಮತ್ತು ಸತ್ಯಕ್ಕಾಗಿ ಹೋರಾಡುವವರ ಎದುರಿಸುವ ಸಂಕಷ್ಟಗಳನ್ನು ಚಿತ್ರಿಸಲಾಗಿದೆ ಎಂದರು. ಆಳ್ವಾಸ್ ಕಾಲೇಜಿನ ಪ್ರಾಚರ‍್ಯ ಡಾ. ಕುರಿಯನ್ ಮಾತನಾಡಿ, ಆಸಕ್ತಿಯ ಹಾದಿಯಲ್ಲಿ ನಿರಂತರ ಪ್ರಯತ್ನ ಮಾಡಿದರೆ ಖಂಡಿತವಾಗಿಯೂ ಯಶಸ್ಸು ನಮ್ಮದಾಗುತ್ತದೆ. ಜೀವನದಲ್ಲಿ ಪ್ರತಿಯೊಬ್ಬರೂ ತಮ್ಮ ಆಸಕ್ತಿಯನ್ನು ಗುರುತಿಸಿ, ಅದನ್ನು ಪೋಷಿಸುತ್ತಾ ಸಾಗಬೇಕು ಎಂದರು. ಸಂಗೀತ ನಿರ್ದೇಶಕ ಹಾಗೂ ಆಳ್ವಾಸ್ ಕಾಲೇಜಿನ ಉಪನ್ಯಾಸಕ ಗೌತಮ್ ಮಾತನಾಡಿ, ಸಾಧಾರಣ ಕಥಾಹಂದರದ ಮೂಲಕ ಸಮಾಜಕ್ಕೆ ಮಹತ್ವದ ಸಂದೇಶವನ್ನು ತಲುಪಿಸುವ ಪ್ರಯತ್ನ ಮಾಡಲಾಗಿದೆ ಎಂದರು. ಕಾರ‍್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಸುದೀಪ್ ಇದ್ದರು. ಕಿರಣ್ ಕಾರ‍್ಯಕ್ರಮ ನಿರೂಪಿಸಿ, ಶಶಾಂಕ್ ಸ್ವಾಗತಿಸಿ, ಸಮೀಕ್ಷಾ ವಂದಿಸಿದರು.

ಎಸ್.ಡಿ.ಎಂ ಸ್ಟ್ಯಾಟ್ ಎಕ್ಸ್‌ಪ್ಲೋರ್ ಅಸೋಸಿಯೇಷನ್‌ಗೆ ಚಾಲನೆ

Article Image

ಎಸ್.ಡಿ.ಎಂ ಸ್ಟ್ಯಾಟ್ ಎಕ್ಸ್‌ಪ್ಲೋರ್ ಅಸೋಸಿಯೇಷನ್‌ಗೆ ಚಾಲನೆ

ಉಜಿರೆ,ಸೆ.22: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗವಕಾಶ ಕಡಿಮೆಯಾಗುತ್ತಿಲ್ಲ. ಹೊಸ ಅವಕಾಶಗಳು ಸೃಷ್ಟಿಯಾಗುತ್ತಿವೆ ಎಂದು ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ಜಿ. ಎಸ್. ತ್ಯಾಗರಾಜು ಹೇಳಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಂಖ್ಯಾಶಾಸ್ತ್ರ ವಿಭಾಗದ ‘ಸ್ಟ್ಯಾಟ್ ಎಕ್ಸ್‌ಪ್ಲೋರ್ ಅಸೋಸಿಯೇಷನ್’ನ ಕಾರ್ಯಚಟುವಟಿಕೆಗಳಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ‘ದಿ ರೋಲ್ ಆಫ್ ಸ್ಟ್ಯಾಟಿಸ್ಟಿಕ್ಸ್ ಇನ್ ಬಿಲ್ಡಿಂಗ್ ರಿಲಯೇಬಲ್ ಎಐ ಸಿಸ್ಟಮ್’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕೃತಕ ಬುದ್ಧಿಮತ್ತೆಗೆ ಪೂರಕವಾದ ಹೊಸ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕಂಪ್ಯೂಟರ್ ಆವಿಪ್ಕಾರವಾದಾಗ ಹಲವರು ಉದ್ಯೋಗವಕಾಶಗಳನ್ನು ಕಳೆದುಕೊಂಡರು. ಮುಂದೆ ಅದರೊಂದಿಗೆಯೇ ಹೊಸ ಕೌಶಲ್ಯಗಳನ್ನು ಬೆಳೆಸಿಕೊಂಡು ಹೊಸ ಬಗೆಯ ಉದ್ಯೋಗಳನ್ನು ಸೃಷ್ಟಿಸಿಕೊಂಡರು. ಅದರಂತೆಯೇ ಆರ್ಟಿಫಿಷಿಯಲ್ ಇಂಟಲಿಜೆನ್ಸ್‌ನ ಹೊಸ ಕೌಶಲ್ಯಗಳೊಂದಿಗೆ ಮುಂದುವರಿಯಬೇಕಾಗಿದೆ ಎಂದರು. ಎಐ ಈಗ ಪ್ರವರ್ಧಮಾನಕ್ಕೆ ಬರುತ್ತಿರುವ ತಾಂತ್ರಿಕತೆ. ಸಂಖ್ಯಾಶಾಸ್ತ್ರದ ಸಾಧ್ಯತೆಗಳನ್ನು ಎಐ ವಿಸ್ತರಿಸಬಲ್ಲದು. ಸಂಖ್ಯಾಶಾಸ್ತ್ರ, ವಲಯದಲ್ಲಿ ನೂತನ ಆವಿಷ್ಕಾರಗಳನ್ನು ರೂಪಿಸುವುದಕ್ಕೆ ಎಐ ತಂತ್ರಜ್ಞಾನವನ್ನು ಪೂರಕವಾಗಿಸಿಕೊಳ್ಳಬೇಕು. ಎಲ್ಲಾ ವಿಷಯಗಳಲ್ಲಿಯೂ ನಿಖರತೆ ಅವಶ್ಯಕ. ಈ ನಿಖರತೆಗೆ ಸಂಖ್ಯಾಶಾಸ್ತ್ರದ ಅಗತ್ಯವಿದೆ. ಈ ನಿಖರತೆಯ ಸ್ವರೂಪವನ್ನು ಇನ್ನಷ್ಟು ಅಧಿಕೃತಗೊಳಿಸುವುದಕ್ಕೆ ಎಐ ತಂತ್ರಜ್ಞಾನ ನೆರವಾಗುತ್ತದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ ಸ್ನಾತಕೋತ್ತರ ಕೇದ್ರದ ಡೀನ್ ಸೌಮ್ಯ ಬಿ.ಪಿ ಮಾತನಾಡಿದರು. ಸರಕಾರವು ಹೊಸ ನೀತಿ ನಿಯಮಗಳನ್ನು ಅಭಿವೃದ್ಧಿಪಡಿಸುವಾಗ ಸಾಂಖ್ಯಿಕ ಮಾಹಿತಿಯನ್ನೇ ಅವಲಂಬಿಸಿರುತ್ತದೆ. ಉದ್ಯಮ ವಲಯ ಮತ್ತು ವ್ಯವಹಾರಗಳಲ್ಲಿಯೂ ಕೂಡ ಸಂಖ್ಯಾಶಾ‌ಸ್ತ್ರವೇ ಮುಖ್ಯ ಪಾತ್ರ ವಹಿಸುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಇದರ ಕಡೆ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು. ಕಾರ‍್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥೆ ಡಾ. ಸವಿತಾ ಕುಮಾರಿ ಉಪಸ್ಥಿತರಿದ್ದರು. ದ್ವಿತೀಯ ಎಂಎಸ್ಸಿ ವಿದ್ಯಾರ್ಥಿನಿ ಪ್ರಕೃತಿ ಟಿ.ಪಿ ವಂದಿಸಿದರು.

ಶತಮಾನಗಳೇ ಕಲಿತರು ವಿದ್ಯೆಗೆ ವಯಸ್ಸಿಲ್ಲ: ಡಾ. ಬಿ.ಎ ಕುಮಾರ ಹೆಗ್ಡೆ

Article Image

ಶತಮಾನಗಳೇ ಕಲಿತರು ವಿದ್ಯೆಗೆ ವಯಸ್ಸಿಲ್ಲ: ಡಾ. ಬಿ.ಎ ಕುಮಾರ ಹೆಗ್ಡೆ

ಚರಿತ್ರೆಯ ಆಳವಾದ ಜ್ಞಾನ ನಾವು ತಿಳಿಯಬೇಕು. ಹಿಂದಿನ ಕಾಲಘಟ್ಟದವರು ಬಹಳ ಸೂಕ್ಷ್ಮವಾಗಿ ಆಲೋಚನೆ ಮಾಡುತ್ತಾ ಇದ್ದರು. ಅವರ ವಿದ್ಯೆಗೆ ಸಾಟಿಯಿಲ್ಲ, ಶತಮಾನಗಳೇ ಕಲಿತರು ವಿದ್ಯೆಗೆ ವಯಸ್ಸಿಲ್ಲ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಎ. ಕುಮಾರ ಹೆಗ್ಡೆ ಹೇಳಿದರು. ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಕನ್ನಡ ವಿಭಾಗ ಹಾಗೂ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ನಡೆದ ತತ್ವಪದಗಳು - ಸಾಂಸ್ಕೃತಿಕ ಅನುಸಂಧಾನ ಎರಡು ದಿನಗಳ ರಾಷ್ಟೀಯ ವಿಚಾರ ಸಂಕಿರಣದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಿಂದಿನ ಸ್ಥಿತಿಗತಿಗಳನ್ನು ಅರಿತು ಬಹಳ ಖರಾರುವಕ್ಕಾಗಿ ತತ್ವಪದಕಾರರು ಸಮಾಜಕ್ಕೆ ಕೊಡುಗೆಗಳನ್ನು ನೀಡಿದ್ದಾರೆ. ತತ್ವಪದಕಾರರು ಕೊಟ್ಟ ವಿಷಯಗಳು ಅಧ್ಯಯನಕ್ಕೆ ಉತ್ತಮವಾದ ವಿಷಯಗಳಾಗಿವೆ. ಅವರಿಗೆ ತಿಳಿದ ಅಥವಾ ಅನುಭವಕ್ಕೆ ಬಂದ ವಿಷಯಗಳನ್ನು ತತ್ವಪದಕಾರರು ಪದ್ಯಗಳ ಮೂಲಕ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ತತ್ವಪದಗಳನ್ನು ರಚಿಸಿದ್ದಾರೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಬೋಜಮ್ಮ ಕೆ.ಎನ್. "ಈ ಕಾರ್ಯಕ್ರಮಕ್ಕೆ ವಿಧ್ಯಾರ್ಥಿಗಳ ನಾಡಿಮಿಡಿತವನ್ನು ಅರಿತು ಮಾಹಿತಿ ನೀಡುವ ಸಂಪನ್ಮೂಲ ವ್ಯಕ್ತಿಗಳು ಬಂದಿದ್ದರು. ಎಲ್ಲಾ ವಿದ್ಯಾರ್ಥಿಗಳು ಬಹಳ ಚುರುಕಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಬಹಳ ತಾಳ್ಮೆಯಿಂದ ಪ್ರೀತಿಯಿಂದ ಕಾರ್ಯಕ್ರಮ ನಡೆಸಲು ಸಹಕರಿಸಿದ್ದಾರೆ ಎಂದರು. ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರಾಧ್ಯಾಪಕಿ ಜಯಶ್ರೀ ಹಾಗೂ ವಿದ್ಯಾರ್ಥಿಗಳಾದ ಅನಿರುದ್ಧ್, ಅನನ್ಯ, ಮನೀಷ್ ಮತ್ತು ಶೇಖರ ಅಭಿಪ್ರಾಯ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು. ಪ್ರಾಧ್ಯಾಪಕರು, ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ನಾಗಣ್ಣ ಡಿ. ಎ. ಸ್ವಾಗತಿಸಿ, ಕನ್ನಡ ವಿಭಾಗದ ಪ್ರಾಧ್ಯಾಪಕಿ ಭವ್ಯಶ್ರೀ ಬಲ್ಲಾಳ್ ನಿರೂಪಿಸಿ ವಂದಿಸಿದರು.

ಉಜಿರೆ ರುಡ್‌ಸೆಟ್ ಸಂಸ್ಥೆ ಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭೇಟಿ

Article Image

ಉಜಿರೆ ರುಡ್‌ಸೆಟ್ ಸಂಸ್ಥೆ ಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭೇಟಿ

ಉಜಿರೆ: ಉಜಿರೆಯ ಸಿದ್ಧವನ ರುಡ್ ಸೆಟ್ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯಲ್ಲಿ ನಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾರ್ಗದರ್ಶನ ನೀಡುತ್ತಾ ರುಡ್‌ಸೆಟ್ ಸಂಸ್ಥೆಗಳ ತರಬೇತಿಯಲ್ಲಿ ಪ್ರಯೋಗಿಕ ತರಬೇತಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದ್ದರಿಂದ ಶಿಭಿರಾರ್ಥಿಗಳಿಗೆ ಹೆಚ್ಚು ಕೌಶಲ್ಯ ಪಡೆಯಲು ಸಾದ್ಯವಾಗುತ್ತದೆ ಎಂದು ತಿಳಿಸಿದರು. ಇದರಿಂದ ಸ್ವಂತ ಉದ್ಯೋಗ ಪ್ರಾರಂಬಿಸಲು ಅನುಕೂಲವಾಗುತ್ತದೆ, ಇಲ್ಲಿನ ತರಬೇತಿ ಪಡೆದ ನಂತರವೂ ಹೊಸ ಹೊಸ ತಂತ್ರಜ್ಞಾನಗಳನ್ನು ನವೀಕರಿಸಿಕೊಳ್ಳಿ, ಹೊಸ ವಿನ್ಯಾಸಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸಿ ಹಾಗೂ ಉದ್ಯಮಿಗಳು ಲೆಕ್ಕಪತ್ರಗಳನ್ನು ಸರಿಯಾಗಿ ಇಟ್ಟುಕೊಂಡಾಗ ಲಾಭ ನಷ್ಟಗಳ ವಿವರ ದೊರೆಯುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ಶ್ರೀಯುತ ನರ್ವಾಡೆ ವಿನಾಯಕಕಾರಭಾರಿ IAS, ಹೇಳಿ ತರಬೇತಿ ಪಡೆದಯಿತ್ತಿರುವ ಎಲ್ಲರಿಗೂ ಶುಭ ಹಾರೈಸಿದರು ನಂತರ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆದ ರುಡ್ ಸೆಟ್ ಸಂಸ್ಥೆಯ ಜಿಲ್ಲಾ ಮಟ್ಟದ ಪ್ರಗತಿ ಪರೀಶೀಲನಾ ಸಭೆಯಲ್ಲಿ ಭಾಗವಹಿಸಿ, ಸಲಹೆಗಳನ್ನು ನೀಡಿ ಸಹಕಾರಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಗ್ರಣಿ ಬ್ಯಾಂಕಿನ್ ಮುಖ್ಯ ಪ್ರಬಂಧಕರಾದ ಕವಿತಾ ಎನ್ ಶೆಟ್ಟಿ ಹಾಗೂ ನರ್ಬಾಡ್ ಸಂಸ್ಥೆಯ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಸಂಗೀತಾ ಕರ್ತಾ, ಶ್ರೀ ಧರ್ಮಸ್ಥ ಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾದ ಡಾ. ಎಸ್ ಸತೀಶ್ಚಂದ್ರ, ಉಜಿರೆ ಕೆನರಾ ಬ್ಯಾಂಕಿನ ಹಿರಿಯ ಪ್ರಬಂಧಕರಾದ ಜಯಂತ ಅಡಿಗ ಮತ್ತು ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ವಿಜಯ ಕುಮಾರ ಬಿ.ಪಿ, ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್, ಉಪನ್ಯಾಸಕರಾದ ಕೆ. ಕರುಣಾಕರ ಜೈನ್ ಉಪಸ್ಥಿತರಿದ್ದರು.

ಧರ್ಮಸ್ಥಳದಲ್ಲಿ ಇಪ್ಪತ್ತೇಳನೇ ವರ್ಷದ ಭಜನಾ ಕಮ್ಮಟ : 23 ಶ್ರೇಷ್ಠ ಭಜನಾ ಮಂಡಳಿಗಳಿಗೆ ಸಾಧಕ ಪ್ರಶಸ್ತಿ ಪ್ರದಾನ

Article Image

ಧರ್ಮಸ್ಥಳದಲ್ಲಿ ಇಪ್ಪತ್ತೇಳನೇ ವರ್ಷದ ಭಜನಾ ಕಮ್ಮಟ : 23 ಶ್ರೇಷ್ಠ ಭಜನಾ ಮಂಡಳಿಗಳಿಗೆ ಸಾಧಕ ಪ್ರಶಸ್ತಿ ಪ್ರದಾನ

ಉಜಿರೆ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನೇತೃತ್ವದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶನಿವಾರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಭಜನಾ ಕಮ್ಮಟದಲ್ಲಿ ಉತ್ತಮ ಸೇವೆ, ಸಾಧನೆ ಮಾಡಿದ 23 ಭಜನಾ ಮಂಡಳಿಗಳಿಗೆ “ಸಾಧಕ ಪ್ರಶಸ್ತಿ” ಪ್ರದಾನ ಮಾಡಿ ಅಭಿನಂದಿಸಿದರು. ಭಜನೆ ಮಾಡುವಾಗ ಪರಿಶುದ್ಧ ತನು, ಮನದಿಂದ ದೃಢಸಂಕಲ್ಪದೊಂದಿಗೆ ಯಾವುದೇ ರೀತಿಯ ಚಿಂತೆ, ಸಂಕೋಚ ಇಲ್ಲದೆ ಭಕ್ತಿ ಹಾಗೂ ಉತ್ಸಾಹದಿಂದ ಮಾಡಬೇಕು ಎಂದು ಅವರು ಸಲಹೆ ನೀಡಿದರು. ಎಲ್ಲಾ ಭಜನಾ ಮಂಡಳಿಗಳ ಸೇವಾ ಕಳಕಳಿ ಮತ್ತು ಬದ್ಧತೆಯನ್ನು ಶ್ಲಾಘಿಸಿದ ಅವರು ಹಿಂದೆ ಎಲ್ಲಾ ಕಡೆಗಳಲ್ಲಿ “ಜನ ಮರುಳೋ, ಜಾತ್ರೆ ಮರುಳೋ” ಎಂಬ ಮಾತು ಕೇಳಿ ಬರುತ್ತಿತ್ತು. ಆದರೆ ಈಗ ಎಲ್ಲೆಡೆ ಭಜನಾ ಮಂಡಳಿಗಳಿಂದಾಗಿ ಎಲ್ಲಾ ಊರುಗಳಲ್ಲಿ ನಡೆಯುವ ಜಾತ್ರೆ, ಉತ್ಸವ, ಸಭೆ-ಸಮಾರಂಭ, ಹಬ್ಬ ಹರಿದಿನಗಳಲ್ಲಿ ಶಿಸ್ತು, ಸಂಯಮ, ಸ್ವಚ್ಛತೆ, ಬದ್ಧತೆ ಹಾಗೂ ಸೇವಾ ಕಳಕಳಿ ಕಂಡುಬರುತ್ತಿರುವುದು ನಮಗೆ ಹೆಚ್ಚಿನ ಸಂತೋಷ ಮತ್ತು ತೃಪ್ತಿ ನೀಡಿದೆ ಎಂದು ಹೆಗ್ಗಡೆಯವರು ಅಭಿಪ್ರಾಯ ವ್ಯಕ್ತಪಡಿಸಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ವಿಶೇಷವಾಗಿ ಭಜನೆಯಲ್ಲಿ ಪುಟ್ಟಮಕ್ಕಳ ಪ್ರತಿಭೆ, ಆಸಕ್ತಿ ಮತ್ತು ಉತ್ಸಾಹವನ್ನು ಅವರು ಶ್ಲಾಘಿಸಿದರು. ಭಜನಾ ಪರಿಷತ್‌ನ ಅಧ್ಯಕ್ಷರಾದ ಚಂದ್ರಶೇಖರ ಸಾಲಿಯಾನ್ ಮತ್ತು ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಹಾಗೂ ಎಲ್ಲಾ ಪದಾಧಿಕಾರಿಗಳ ಸೇವೆಯನ್ನು ಹೆಗ್ಗಡೆಯವರು ಶ್ಲಾಘಿಸಿದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಮಾಣಿಲದ ಮೋಹನದಾಸ ಸ್ವಾಮೀಜಿ ಮತ್ತು ಭಜನಾ ಪರಿಷತ್‌ನ ಅಧ್ಯಕ್ಷರಾದ ಚಂದ್ರಶೇಖರ ಸಾಲಿಯಾನ್ ಇದ್ದರು. ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ ಭಜನಾ ಮಂಡಳಿಗಳ ಸೇವೆ, ಸಾಧನೆಯನ್ನು ಸಾದರಪಡಿಸಿದರು. ಭಜನಾ ಕಮ್ಮಟದ ಕಾರ್ಯದರ್ಶಿ ಎ.ವಿ. ಶೆಟ್ಟಿ ಸ್ವಾಗತಿಸಿದರು. ಭಜನಾ ಪರಿಷತ್‌ನ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಧನ್ಯವಾದವಿತ್ತರು. ವಕೀಲ ಕೇಶವ ಗೌಡ ಕಾರ್ಯಕ್ರಮ ನಿರ್ವಹಿಸಿದರು.

ಭಜನಾ ಪರಿಷತ್: ಪದಾಧಿಕಾರಿಗಳ ವಾರ್ಷಿಕ ಸಭೆ

Article Image

ಭಜನಾ ಪರಿಷತ್: ಪದಾಧಿಕಾರಿಗಳ ವಾರ್ಷಿಕ ಸಭೆ

ಉಜಿರೆ: ಜೀವನದಲ್ಲಿ ಶಿಸ್ತಿಗೆ ಭಜನೆ ಪೂರಕವಾಗಿದೆ. ಪರಿಶುದ್ಧ ದೇಹ ಮತ್ತು ಮನಸ್ಸಿನಿಂದ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡಿದರೆ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಗುರುವಾರ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ನ ಪದಾಧಿಕಾರಿಗಳ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಹೇಮವತಿ ವೀ. ಹೆಗ್ಗಡೆಯವರು ಶುಭಾಶಂಸನೆ ಮಾಡಿ ಭಜನಾ ಪರಿಷತ್ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು. ಶ್ರೀನಿವಾಸರಾವ್, ಸತೀಶ್ ಸುಳ್ಯ ಮತ್ತು ಲೋಕೇಶ್ ಅನಿಸಿಕೆ ವ್ಯಕ್ತಪಡಿಸಿದರು. ಸುಬ್ರಹ್ಮಣ್ಯ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಣಿಲದ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು. ಚಂದ್ರಶೇಖರ ಸಾಲ್ಯಾನ್ ಸ್ವಾಗತಿಸಿದರು. ರವೀಂದ್ರ ಧನ್ಯವಾದವಿತ್ತರು. ಸಂತೋಷ್ ಪಿ. ಅಳಿಯೂರು ಕಾರ್ಯಕ್ರಮ ನಿರ್ವಹಿಸಿದರು.

ಆಳ್ವಾಸ್ ಟೆಕ್ ಪಾರ್ಕ್ನಲ್ಲಿ ಸ್ವಿಚ್‌ಗೇರ್ ಕಂಪನಿ ಶಾಖೆ ಉದ್ಘಾಟನೆ

Article Image

ಆಳ್ವಾಸ್ ಟೆಕ್ ಪಾರ್ಕ್ನಲ್ಲಿ ಸ್ವಿಚ್‌ಗೇರ್ ಕಂಪನಿ ಶಾಖೆ ಉದ್ಘಾಟನೆ

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಟೆಕ್ ಪಾರ್ಕ್ನಲ್ಲಿ ಸ್ವಿಚ್‌ಗೇರ್ ಅಂಡ್ ಕಂಟ್ರೋಲ್ ಟೆಕ್ನಿಕ್ಸ್ ಪ್ರೈವೇಟ್ ಲಿಮಿಟೆಡ್ (SCTPL) ನ ಹೊಸ ಘಟಕವನ್ನು ಉದ್ಘಾಟಿಸಲಾಯಿತು. ಘಟಕ ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು, “ಇಂತಹ ಅಂತರರಾಷ್ಟ್ರೀಯ ಕಂಪನಿಗಳು ಕರಾವಳಿ ಭಾಗದಲ್ಲಿ ಸ್ಥಾಪನೆಯಾಗುವುದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳು ದೊರೆತು, ಅವರ ಪ್ರತಿಭೆಗೆ ಪೂರಕ ಪ್ರೋತ್ಸಾಹ ದೊರೆಯಲಿದೆ ಎಂದು ಹೇಳಿದರು. ಪ್ರಸ್ತುತ ಆಳ್ವಾಸ್ ಟೆಕ್ ಪಾರ್ಕ್‌ನಲ್ಲಿ 8 ಕಾರ್ಪೊರೇಟ್ ಕಂಪನಿಗಳು, 4 ಸ್ಟಾರ್ಟ್ಅಪ್‌ಗಳು ಮತ್ತು 2 ‘ಸೆಂಟರ್ ಆಫ್ ಎಕ್ಸಲೆನ್ಸ್’ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳು ವಿದ್ಯಾರ್ಥಿಗಳಲ್ಲಿ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸುತ್ತಿವೆ. ಈಗಾಗಲೇ 75 ವಿದ್ಯಾರ್ಥಿಗಳು ತಮ್ಮ 12 ಹೊಸ ಸ್ಟಾರ್ಟ್ಅಪ್ ಆಲೋಚನೆಗಳನ್ನು ಕಾರ್ಯಗತಗೊಳಿಸಲು ಸಕ್ರಿಯ ತರಬೇತಿ ಪಡೆಯುತ್ತಿದ್ದಾರೆ. ಉದ್ಯಮಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಟೈ (TiE), ಸಿಐಐ (CII) ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳ ಸಹಕಾರ ಲಭ್ಯವಾಗಿದೆ ಎಂದರು. SCTPL ನಿರ್ದೇಶಕ ಹರ್ಷಿತ್ ಶೆಟ್ಟಿ ಮಾತನಾಡಿ, “ನಮ್ಮ ಕಂಪನಿ 2004ರಲ್ಲಿ ಸ್ಥಾಪನೆಯಾದ ಭಾರತೀಯ ಸಂಸ್ಥೆಯಾಗಿದ್ದು, ಲೋ ಮತ್ತು ಮಿಡಿಯಂ ವೋಲ್ಟೇಜ್ ಸ್ವಿಚ್‌ಬೋಡ್‌ಗಳು, ಬಸ್‌ವೇ ವ್ಯವಸ್ಥೆಗಳು ಹಾಗೂ ಶೀಟ್ ಮೆಟಲ್ ಎನ್‌ಕ್ಲೋಸರ್ ತಯಾರಿಕೆಯಲ್ಲಿ ಪರಿಣತಿ ಹೊಂದಿದೆ. ವಿದ್ಯುತ್ ವಿತರಣೆ, ಶಕ್ತಿ ನಿರ್ವಹಣೆ ಮತ್ತು ಕೈಗಾರಿಕಾ ಸ್ವಯಂಚಾಲಿತ ಪರಿಹಾರಗಳಲ್ಲಿ ಕಂಪನಿಯು ಸಮಗ್ರ ಸೇವೆಗಳನ್ನು ನೀಡುತ್ತಿದೆ” ಎಂದು ತಿಳಿಸಿದರು. ಸದ್ಯ 100 ಕೋಟಿ ವ್ಯವಹಾರ ನಡೆಸುತ್ತಿದ್ದು, ಮುಂದಿನ ವರ್ಷಗಳಲ್ಲಿ 1000 ಕೋಟಿಯ ವ್ಯವಹಾರ ವೃದ್ಧಿಸುವ ಗುರಿಯಿದೆ ಎಂದರು. ಮೂಡುಬಿದಿರೆಯಲ್ಲಿ ಆರಂಭಗೊಂಡ ಈ ಘಟಕವನ್ನು ಮಿನಿಯೇಚರ್ (ಕಂಪನಿಯ ಉತ್ಪನ್ನಗಳ ಸಣ್ಣ ರೂಪ) ತಯಾರಿಕಾ ಕೇಂದ್ರವಾಗಿ ಬಳಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಕೆಲಸದ ಅನುಭವ ದೊರೆಯಲಿದ್ದು, ತರಬೇತಿ ಪಡೆಯುವಾಗಲೇ ಸಂಪಾದನೆ ಮಾಡುವ ಅವಕಾಶವೂ ಸಿಗಲಿದೆ. ಇಲ್ಲಿ ತರಬೇತಿ ಪಡೆಯುವವರು ಭವಿಷ್ಯದಲ್ಲಿ ಹೊಸದಾಗಿ ಸೇರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆದ ಹರ್ಷಿತ್ ಶೆಟ್ಟಿ, ತನ್ನ ಇಂದಿನ ಸಾಧನೆಗೆ ಡಾ. ಎಂ. ಮೋಹನ ಆಳ್ವರಿಂದ ಕಲಿತ ಸಮಯಪಾಲನೆ, ಶಿಸ್ತು ಮತ್ತು ಪರಿಶ್ರಮವೇ ಮೂಲಾಧಾರ ಎಂದರು. ಕಾರ‍್ಯಕ್ರಮದಲ್ಲಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಚರ‍್ಯ ಡಾ ಪೀಟರ್ ಫೆರ್ನಾಂಡೀಸ್ SCTPL ನಿರ್ದೇಶಕ ವಿನಯ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉದ್ಯಮಶೀಲಾ ಅಭಿವೃದ್ಧಿಕೋಶದ ಮುಖ್ಯಸ್ಥ ವೇಣುರಾವ್ ದೇವ್, ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಪಕರಾದ ಡಾ. ಕುಮಾರಸ್ವಾಮಿ ಹಾಗೂ ಶ್ರೀನಿವಾಸ ಇದ್ದರು.

ತತ್ವಪದಗಳು-ಸಾಂಸ್ಕೃತಿಕ ಅನುಸಂಧಾನ: ರಾಷ್ಟ್ರೀಯ ವಿಚಾರ ಸಂಕಿರಣ

Article Image

ತತ್ವಪದಗಳು-ಸಾಂಸ್ಕೃತಿಕ ಅನುಸಂಧಾನ: ರಾಷ್ಟ್ರೀಯ ವಿಚಾರ ಸಂಕಿರಣ

ಉಜಿರೆ: ತತ್ವಪದಗಳಲ್ಲಿ ಸಮಾಜದ ಸರ್ವತೋಮುಖ ಪ್ರಗತಿಗೆ ಪೂರಕವಾದ, ವಿಶ್ವಮಾನವ ಪ್ರಜ್ಞೆ ಮೂಡಿಸುವ, ಸಮಾಜಸುಧಾರಣೆಯ ನೈತಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳ ಸತ್ವಪೂರ್ಣ ಸಂದೇಶವಿದ್ದು ಅದರ ಅನುಷ್ಠಾನದಿಂದ ಎಲ್ಲೆಡೆ ಶಾಂತಿ, ನೆಮ್ಮದಿ ನೆಲೆಸುತ್ತದೆ. ರಾಜ್ಯದ ವಿವಿಧ ಕಡೆಗಳಲ್ಲಿರುವ ಸಾಹಿತ್ಯ ಮತ್ತು ಸಾಂಸ್ಕೃತಿಕ ನಿಕ್ಷೇಪಗಳ ಅಧ್ಯಯನ ಮತ್ತು ಸಂಶೋಧನೆ ಮಾಡಬೇಕು ಎಂದು ಉಜಿರೆಯ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಹೇಳಿದರು. ಅವರು ಉಜಿರೆಯಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಶುಕ್ರವಾರ ಕನ್ನಡ ವಿಭಾಗದ ಸಹಯೋಗದೊಂದಿಗೆ ಬೆಂಗಳೂರಿನ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಆಯೋಜಿಸಿದ “ತತ್ವಪದಗಳು-ಸಾಂಸ್ಕೃತಿಕ ಅನುಸಂಧಾನ” ಎಂಬ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಯುವಜನತೆಗೆ ಹಾಗೂ ಜನಸಾಮಾನ್ಯರಿಗೆ ತತ್ವಪದಗಳ ಸಾರ್ವಕಾಲಿಕ ಮೌಲ್ಯ ಹೊಂದಿರುವ ಸಂದೇಶಗಳನ್ನು ತಿಳಿಸಬೇಕು ಎಂದು ಅವರು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ವಿಶ್ವನಾಥ್ ಮಾತನಾಡಿ ತತ್ವಪದಗಳ ಸಾರವನ್ನು ತಿಳಿಯುವುದರಿಂದ ಸಮಾಜದಲ್ಲಿರುವ ಅಸಮಾನತೆ, ಅಂಕುಡೊಂಕು ಹಾಗೂ ಬೇಧಭಾವ ನಿವಾರಣೆಯಾಗಿ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಸಂಕುಚಿತ ಮನೋಭಾವ ದೂರವಾಗುತ್ತದೆ ಎಂದು ಹೇಳಿದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕ ಪ್ರೊ. ಎಸ್.ಎನ್. ಕಾಕತ್ಕರ್ ಬಿ.ಎ. ಅಂತಿಮ ಪದವಿ ತರಗತಿಯ ವಿದ್ಯಾರ್ಥಿಗಳು ರಚಿಸಿದ “ಭಿತ್ತಿಪತ್ರಿಕೆ” ಯನ್ನು ಅನಾವರಣಗೊಳಿಸಿದರು. ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಹಿರಿಯ ಅಧಿಕಾರಿ ಸತ್ಯನಾರಾಯಣ ಮತ್ತು ನಿವೃತ್ತ ಪ್ರಾಂಶುಪಾಲ ಪ್ರೊ .ಬಿ.ಎ. ಕುಮಾರ ಹೆಗ್ಡೆ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಬೋಜಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಿಚಾರಸಂಕಿರಣದ ಸಂಚಾಲಕ ಪ್ರೊ. ನಾಗಣ್ಣ ಡಿ.ಎ. ಧನ್ಯವಾದವಿತ್ತರು. ಕನ್ನಡ ಉಪನ್ಯಾಸಕಿ ಭವ್ಯಶ್ರೀ ಬಳ್ಳಾಲ್ ಕಾರ್ಯಕ್ರಮ ನಿರ್ವಹಿಸಿದರು.

ಧರ್ಮಸ್ಥಳದಲ್ಲಿ ರುದ್ರಪಾರಾಯಣ

Article Image

ಧರ್ಮಸ್ಥಳದಲ್ಲಿ ರುದ್ರಪಾರಾಯಣ

ಉಜಿರೆ: ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶುಕ್ರವಾರ ಶ್ರೀ ರಾಮಚಂದ್ರಾಪುರ ಮಠದ ಪೂಜ್ಯ ರಾಘವೇಶ್ವರಭಾರತಿ ಸ್ವಾಮೀಜಿಯವರ ಆಶೀರ್ವಾದಗಳೊಂದಿಗೆ ಹವ್ಯಕ ಮಹಾಮಂಡಲದ 550ಕ್ಕೂ ಮಿಕ್ಕಿದ ಶಿಷ್ಯ ವೃಂದದವರು ಹಾಗೂ ವಿದ್ವಾಂಸರು ಧರ್ಮಸ್ಥಳ ಬಂದು ಪವಿತ್ರ ತೀರ್ಥ ಕ್ಷೇತ್ರ ಹಾಗೂ ಹೆಗ್ಗಡೆಯವರ ಬಗ್ಯೆ ಇರುವ ಅಪಪ್ರಚಾರ ಮತ್ತು ಗೊಂದಲ ಸುಲಲಿತವಾಗಿ ನಿವಾರಣೆಯಾಗಿ ಮನಃಶಾಂತಿ, ನೆಮ್ಮದಿ ನೆಲೆಸಲಿ ಎಂದು ದೇವಸ್ಥಾನದಲ್ಲಿ ರುದ್ರಾನುಷ್ಠಾನ ಸಮರ್ಪಣೆ ಬಳಿಕ ಪ್ರವಚನ ಮಂಟಪದಲ್ಲಿ ರುದ್ರಪಾರಾಯಣ ಸೇವೆಯನ್ನು ಶ್ರದ್ಧಾ-ಭಕ್ತಿಯಿಂದ ಮಾಡಿದರು. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಪೂಜ್ಯ ರಾಘವೇಶ್ವರ ಭಾರತೀ ಸ್ವಾಮೀಜಿಯವರು ವಯಸ್ಸಿನಲ್ಲಿ ಕಿರಿಯವರಾದರೂ ಜ್ಞಾನವೃದ್ಧರಾಗಿದ್ದು, ವಿಶೇಷ ನಾಯಕತ್ವದ ಲಕ್ಷಣ ಹೊಂದಿದ್ದಾರೆ. ತಮ್ಮ ಮೇಲೆ ಹಾಗೂ ಧರ್ಮಸ್ಥಳದ ಬಗ್ಯೆ ಅಪಾರ ಪ್ರೀತಿ-ವಿಶ್ವಾಸ, ಗೌರವ ಹೊಂದಿರುವ ಪೂಜ್ಯರ ಆಶೀರ್ವಾದಗಳಿಂದ ಕಷ್ಟದಿಂದ ಪಾರಾಗಿ ಕೊನೆಗೆ ಜಯಸಿಗಬಹುದು ಎಂದು ಹೆಗ್ಗಡೆಯವರು ವಿಶ್ವಾಸ ವ್ಯಕ್ತಪಡಿಸಿದರು. ಶ್ರೀರಾಮನೂ, ರಾವಣನಿಂದ ಹಿಂಸೆ ಅನುಭವಿಸಿ ಕೊನೆಗೆ ಜಯಶೀಲನಾದ. ಪೂಜ್ಯರ ಪರವಾಗಿ ಶಿಷ್ಯರು, ವಿದ್ವಾಂಸರೆಲ್ಲ ಧರ್ಮಸ್ಥಳಕ್ಕೆ ಬಂದು ಆಶೀರ್ವಾದ ಮಾಡಿ ಗೌರವಿಸಿರುವುದಕ್ಕೆ ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿ ಎಲ್ಲರಿಗೂ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಪ್ರಾರ್ಥಿಸಿ, ಶುಭ ಹಾರೈಸಿದರು. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರನ್ನು ಗೌರವಿಸಲಾಯಿತು. ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಶ್ರೀಮಠದ ವೈದಿಕ ವಿದ್ವಾಂಸರಿಂದ ವಿಪ್ರಾಶೀರ್ವಾದ ನಡೆಯಿತು. ಹವ್ಯಕ ಮಹಾಮಂಡಲದ ಅಧ್ಯಕ್ಷ ಪಳ್ಳತ್ತಡ್ಕ ಶಂಕರನಾರಾಯಣ ಭಟ್ ಅವರನ್ನು ಹೆಗ್ಗಡೆಯವರು ಗೌರವಿಸಿದರು. ರಾಮಚಂದ್ರಾಪುರ ಮಠದ ಶಾಸ್ತ್ರಿಗಳಾದ ಸುಚೇತನ ಶಾಸ್ತ್ರಿ, ಹವ್ಯಕ ಮಹಾಮಂಡಲದ ಅಧ್ಯಕ್ಷ ಹರಿಪ್ರಸಾದ್, ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಮಾತೃವಿಭಾಗದ ಅಧ್ಯಕ್ಷರಾದ ದೇವಿಕಾ ಶಾಸ್ತ್ರಿ, ಈಶ್ವರಿ, ಉಜಿರೆಯ ಶಾಮಭಟ್ ಅತ್ತಾಜೆ ಮತ್ತು ಕೇಶವ ಅತ್ತಾಜೆ ಮೊದಲಾದವರು ಉಪಸ್ಥಿತರಿದ್ದರು.

ಅಂತರಾಷ್ಟ್ರೀಯ ಸೂಕ್ಷ್ಮಜೀವಿಗಳ ದಿನಾಚರಣೆಯ

Article Image

ಅಂತರಾಷ್ಟ್ರೀಯ ಸೂಕ್ಷ್ಮಜೀವಿಗಳ ದಿನಾಚರಣೆಯ

ಮೂಡುಬಿದಿರೆ: ಸೂಕ್ಷ್ಮಜೀವಿಗಳನ್ನು ಕೇವಲ ರೋಗಕಾರಕರೆಂದು ನೋಡುವ ಬದಲು, ಅವು ಪ್ರಕೃತಿಯ ಸಮತೋಲನ ಮತ್ತು ಮಾನವ ಬದುಕಿಗೆ ನೀಡುವ ಕೊಡುಗೆಯನ್ನು ಅರ್ಥಮಾಡಿಕೊಂಡಾಗ ಮಾತ್ರ ನಾವು ಆರೋಗ್ಯಕರ ಹಾಗೂ ಸಮೃದ್ಧ ಸಮಾಜವನ್ನು ಕಟ್ಟಬಹುದು ಎಂದು ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಬಯೋಟೆಕ್ನಾಲಜಿ ವಿಭಾಗದ ಸಹಪ್ರಾಧ್ಯಾಪಕಿ ಡಾ. ದಿವ್ಯಶ್ರೀ ಎಂ.ಎಸ್. ಅಭಿಪ್ರಾಯಪಟ್ಟರು. ಅವರು ಆಳ್ವಾಸ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸೂಕ್ಷ್ಮಜೀವಿಗಳ ದಿನಾಚರಣೆಯ ಅಂಗವಾಗಿ ಸೂಕ್ಷ್ಮ ಜೀವಶಾಸ್ತ್ರ ವಿಭಾಗ ಆಯೋಜಿಸಿದ್ದ ಅತಿಥಿ ಉಪನ್ಯಾಸದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಉಪನ್ಯಾಸದಲ್ಲಿ ಸೂಕ್ಷ್ಮಜೀವಿಗಳಿಂದ ಪಡೆಯಬಹುದಾದ ಅನೇಕ ಉಪಯೋಗಗಳ ಕುರಿತಂತೆ ವಿವರಿಸಿದರು. ಸಾಮಾನ್ಯವಾಗಿ ಸೂಕ್ಷ್ಮಜೀವಿಗಳನ್ನು ಕೇಳಿದಾಗ ಅನೇಕರು ರೋಗಗಳೊಂದಿಗೆ ಅವುಗಳನ್ನು ಸಂಬಂಧಿಸುತ್ತಾರೆ. ನಿಜಕ್ಕೂ ಕೆಲವೆಡೆ ಸೂಕ್ಷ್ಮಜೀವಿಗಳು ಅಪಾಯಕಾರಿ, ಆದರೆ ಅದಕ್ಕಿಂತ ಹೆಚ್ಚಿನವು ಮಾನವನ ಬದುಕಿಗೆ ಅತ್ಯಗತ್ಯವಾದವುಗಳೇ ಆಗಿವೆ. ನಮ್ಮ ಕರುಳಿನಲ್ಲಿ ಕೋಟ್ಯಾಂತರ ಸೂಕ್ಷ್ಮಜೀವಿಗಳು ವಾಸಿಸುತ್ತಿದ್ದು, ಜೀರ್ಣಕ್ರಿಯೆಯಲ್ಲಿ ಸಹಾಯ ಮಾಡುತ್ತವೆ. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಆರೋಗ್ಯಕರ ಜೀವನಕ್ಕೆ ನೆರವಾಗುತ್ತವೆ. ದೈನಂದಿನ ಜೀವನದಲ್ಲಿ ಹಾಲಿನ ಉತ್ಪನ್ನಗಳು – ಮೊಸರು, ಚೀಸ್, ಬೆಣ್ಣೆ ಮುಂತಾದವುಗಳ ತಯಾರಿಕೆಯಲ್ಲಿ ಸೂಕ್ಷ್ಮಜೀವಿಗಳೇ ಪ್ರಮುಖ ಪಾತ್ರವಹಿಸುತ್ತವೆ. ಕೃಷಿ ಕ್ಷೇತ್ರದಲ್ಲಿ ನೈಟ್ರೋಜನ್ ಸ್ಥಿರೀಕರಣ ಮಾಡುವ ಬ್ಯಾಕ್ಟೀರಿಯಾಗಳು ಬೆಳೆ ಉತ್ಪಾದನೆ ಹೆಚ್ಚಿಸಲು ಸಹಕರಿಸುತ್ತವೆ. ಪರಿಸರದಲ್ಲಿ ಜೀವಾವಶೇಷಗಳನ್ನು ಅಳಿಸಿ ಪ್ರಕೃತಿಯ ಚಕ್ರವನ್ನು ನಿರಂತರವಾಗಿಸುವುದು ಸಹ ಸೂಕ್ಷ್ಮಜೀವಿಗಳ ಕೆಲಸ. ಹವಾಮಾನ ಬದಲಾವಣೆ ನಿಯಂತ್ರಣ, ನವೀಕರಿಸಬಹುದಾದ ಶಕ್ತಿ ಉತ್ಪಾದನೆ, ಜೈವಿಕ ಗೊಬ್ಬರ ತಯಾರಿಕೆ ಮುಂತಾದ ಕ್ಷೇತ್ರಗಳಲ್ಲಿಯೂ ಸೂಕ್ಷ್ಮಜೀವಿಗಳ ಕೊಡುಗೆ ಅನನ್ಯ ಎಂದರು ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ರಮ್ಯಾ ರೈ ಎಂ. ಹಾಗೂ ಉಪನ್ಯಾಸಕಿ ಚೈತ್ರಾ ಇದ್ದರು. ಬಿಎಸ್ಸಿ ವಿದ್ಯಾರ್ಥಿನಿ ಬೃಂದಾ ಸ್ವಾಗತಿಸಿ, ವೈಷ್ಣವಿ ಅತಿಥಿಯನ್ನು ಪರಿಚಯಿಸಿ, ಫಾತಿಮಾ ಶಿಫ್ನಾ ವಂದಿಸಿ, ವೃದ್ಧಿ ಕೇಳ ನಿರೂಪಿಸಿದರು.

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

Article Image

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

ಪ್ರತಿಷ್ಟಿತ ಕೆನರಾ ಬ್ಯಾಂಕಿನ ಕೇಂದ್ರ ಕಛೇರಿಯ ಎಫ್.ಐ ವಿಂಗ್ ಜನರಲ್ ಮ್ಯಾನೇಜರ್ ಎಂ. ಭಾಸ್ಕರ ಚಕ್ರವರ್ತಿ ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸೆ.13ರಂದು ಭೇಟಿ ನೀಡಿದರು. ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕರಾದ ಡಾ. ದೇವೇಂದ್ರ ಕುಮಾರ್. ಪಿ ಹಾಗೂ ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಇವರು ಸ್ವಾಗತಿಸಿ ಬರಮಾಡಿಕೊಂಡರು. ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ ಬಾರಿ ತಾನು ಭೇಟಿ ನೀಡಿದಾಗ ಇದ್ದ ತಜ್ಞ ವೈದ್ಯರ ಸಂಖ್ಯೆ, ಸಿಬ್ಬಂದಿಗಳ ಸಂಖ್ಯೆ, ರೋಗಿಗಳ ಸಂಖ್ಯೆ ಈ ಬಾರಿ ಎಲ್ಲವೂ ಹೆಚ್ಚಾಗಿದೆ. ಆಸ್ಪತ್ರೆ ಮತ್ತು ಆಸ್ಪತ್ರೆಯ ಸೇವೆ ಕೂಡ ವಿಸ್ತಾರಗೊಳ್ಳುತ್ತಿದೆ. ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮಿತದರದಲ್ಲಿ ಅತ್ಯಾಧುನಿಕ ವೈದ್ಯಕೀಯ ಸೇವೆ ನೀಡುತ್ತಿರುವ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸೇವೆಯನ್ನು ಶ್ಲಾಘಿಸಿದ ಅವರು ಕೇಂದ್ರ ಸರಕಾರದ ಹಲವಾರು ಉಳಿತಾಯ ಮತ್ತು ವಿಮಾ ಯೋಜನೆಗಳ ವಿವರ ನೀಡುತ್ತಾ, ಪ್ರತಿಯೊಬ್ಬರೂ ಈ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವ ಅಗತ್ಯವಿದೆ ಎಂದರು. ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರು ಮಾತನಾಡುತ್ತಾ, ಈ ಆಸ್ಪತ್ರೆಗೆ ಕೆನರಾ ಬ್ಯಾಂಕಿನಿಂದ ಕಳೆದ ವರ್ಷ ನೀಡಲ್ಪಟ್ಟ 10ಲಕ್ಷ ರೂಪಾಯಿಗಳ ವಿಶೇಷ ದೇಣಿಗೆಯನ್ನು ಸ್ಮರಿಸಿದರು. ಈ ಹಣದಲ್ಲಿ ಕಾರ್ಡಿಯಾಕ್ ಮೋನಿಟರ್ ಮತ್ತು ಸಿರಿಂಜ್ ಪಂಪು ಖರೀದಿಸಿದ್ದು, ಇದು ರೋಗಿಗಳ ತುರ್ತುಚಿಕಿತ್ಸೆಗೆ ಬಹಳ ಸಹಕಾರಿಯಾಗಿದೆ ಎಂದರು. ವೈದ್ಯಕೀಯ ಸೇವೆಗಳನ್ನು ವಿವರಿಸಿದ ಅವರು ಇಲ್ಲಿ ನುರಿತ ತಜ್ಞ ವೈದ್ಯರ ತಂಡವಿದ್ದು, ಹಲವಾರು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಮಿತದರದಲ್ಲಿ ನಡೆಸಲಾಗುತ್ತಿದೆ. ಮೊಣಕಾಲು, ಸೊಂಟದಕೀಲುಗಳ ಬದಲಿ ಶಸ್ತ್ರಚಿಕಿತ್ಸೆಗಳಂತಹ ದುಬಾರಿ ಶಸ್ತ್ರಚಿಕಿತ್ಸೆಗಳನ್ನು ಇಲ್ಲಿ ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಮಾಡಲಾಗುತ್ತಿದೆ. ಶೀಘ್ರದಲ್ಲಿ ಎಂ.ಆರ್.ಐ ಸೇವೆ ಕೂಡ ದೊರೆಯಲಿದೆ ಎಂದರು. ವೈದ್ಯಕೀಯ ಅಧೀಕ್ಷಕರಾದ ಡಾ. ದೇವೇಂದ್ರ ಕುಮಾರ್. ಪಿ ಮತ್ತು ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಎಸ್ ಎನ್ ವಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ

Article Image

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಎಸ್ ಎನ್ ವಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಕಾಲೇಜುಗಳ) ಕಾರ್ಕಳ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಾರ್ಕಳದ ಎಸ್ ಎನ್ ವಿ ಪದವಿ ಪೂರ್ವ ಕಾಲೇಜಿನ ಬಾಲಕಯರ ತಂಡ ಉತ್ತಮ ಪ್ರದರ್ಶನದೊಂದಿಗೆ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಇದೇ ಪಂದ್ಯಾವಳಿಯಲ್ಲಿ ಕಾಲೇಜಿನ ವಿದ್ಯಾರ್ಥಿ ಪ್ರೀತೇಶ್ ಇವರು ಉತ್ತಮ ರೈಡರ್ ಆಗಿ ವಿದ್ಯಾರ್ಥಿ ಶರಣ್ ಅವರು ಉತ್ತಮ ಡಿಪೆಂಡರ್ ಆಗಿ ವೈಯಕ್ತಿಕ ಪ್ರಶಸ್ತಿಗಳಿಗೆ ಭಾಜನರಾಗಿರುತ್ತಾರೆ. ಬಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ತರಬೇತುದಾರರು, ಕಾಲೇಜಿನ ಹಳೆ ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಕೋರಿರುತ್ತಾರೆ.

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಎಸ್.ಎನ್.ವಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ

Article Image

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಎಸ್.ಎನ್.ವಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಕಾಲೇಜುಗಳ) ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಎಸ್ ಎನ್ ವಿ ಪದವಿ ಪೂರ್ವ ಕಾಲೇಜಿನ ಬಾಲಕಯರ ತಂಡ ಉತ್ತಮ ಪ್ರದರ್ಶನದೊಂದಿಗೆ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಇದೇ ಪಂದ್ಯಾವಳಿಯಲ್ಲಿ ಕಾಲೇಜಿನ ವಿದ್ಯಾರ್ಥಿ ಶ್ರೀಶಾಂತ್ ಇವರು ಉತ್ತಮ ಆಲ್ ರೌಂಡರ್ ಆಗಿ ವಿದ್ಯಾರ್ಥಿ ಧನುಷ್ ಅವರು ಉತ್ತಮ ಸೆಟ್ಟರ್ ಆಗಿ ವೈಯಕ್ತಿಕ ಪ್ರಶಸ್ತಿಗಳಿಗೆ ಭಾಜನರಾಗಿರುತ್ತಾರೆ. ಬಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ತರಬೇತುದಾರರು, ಕಾಲೇಜಿನ ಹಳೆ ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಕೋರಿರುತ್ತಾರೆ.

ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಬಾಲಕರ- ಬಾಲಕಿಯರ ಖೋ-ಖೋ ಪಂದ್ಯಾಟ

Article Image

ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಬಾಲಕರ- ಬಾಲಕಿಯರ ಖೋ-ಖೋ ಪಂದ್ಯಾಟ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಎಸ್‌ಡಿಪಿಟಿ ಪಿಯು ಕಾಲೇಜು ಕಟೀಲು ಇವರ ಜಂಟಿ ಆಶ್ರಯದಲ್ಲಿ ನಡೆದ ನಡೆದ ಬಾಲಕರ ಹಾಗೂ ಬಾಲಕಿಯರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ಕ್ರಮವಾಗಿ 18ನೇ ಬಾರಿಗೆ ಹಾಗೂ 16ನೇ ಬಾರಿಗೆ ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಬಾಲಕರ ವಿಭಾಗ ಬಾಲಕರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ವಿವೇಕಾನಂದ ಕಾಲೇಜು ಪುತ್ತೂರು ತಂಡವನ್ನು 5 ಅಂಕಗಳು ಹಾಗೂ ಇನ್ನಿಂಗ್ಸ್ನೊಂದಿಗೆ ಮಣಿಸಿ 18ನೇ ಬಾರಿ ಚಾಂಪಿಯನ್ಸ್ ಪ್ರಶಸ್ತಿ ಪಡೆಯಿತು. ಬಾಲಕರ ವೈಯಕ್ತಿಕ ವಿಭಾಗದಲ್ಲಿ ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ಆಳ್ವಾಸ್‌ನ ಅಮರೇಶ್ ಹಾಗೂ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಆಳ್ವಾಸ್‌ನ ಅಶ್ವಿನ್ ಪಡೆದರು. ಬಾಲಕಿಯರ ವಿಭಾಗ ಬಾಲಕಿಯರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ಎಸ್ ಡಿ ಪಿ ಟಿ ಪಿಯು ಕಾಲೇಜು ಕಟೀಲು ತಂಡವನ್ನು 8 ಅಂಕಗಳು ಹಾಗೂ ಇನ್ನಿಂಗ್ಸ್ನೊಂದಿಗೆ ಮಣಿಸಿ 16ನೇ ಬಾರಿ ಜಯಶಾಲಿಯಾಯಿತು. ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ಉತ್ತಮ ಹಿಡಿತಗಾರ್ತಿ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜಿನ ಸಿಂಧುಜಾ ಹಾಗೂ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಆಳ್ವಾಸ್‌ನ ಮೋನಿಕಾ ಪಡೆದರು.

ಉಜಿರೆ: ಫಿಸಿಯೋಥೆರಪಿ ಶಿಬಿರ

Article Image

ಉಜಿರೆ: ಫಿಸಿಯೋಥೆರಪಿ ಶಿಬಿರ

ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಫಿಸಿಯೋಥೆರಪಿ ದಿನದ ಪ್ರಯುಕ್ತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರವನ್ನು ನಡೆಸಲಾಯಿತು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ದನ್ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ಫಿಸಿಯೋಥೆರಪಿಯಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಅದರದ್ದೇ ಆದ ಚಿಕಿತ್ಸಾ ವಿಧಾನಗಳಿವೆ. ನಮ್ಮ ಆಸ್ಪತ್ರೆಯಲ್ಲಿ ರೋಗಿಗಳ ಆರೋಗ್ಯ ಸಮಸ್ಯೆಗಳಿಗೆ ತಕ್ಕಂತೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ. ಇಬ್ಬರು ಫಿಸಿಯೋಥೆರಪಿ ತಜ್ಞರು ಫಿಸಿಯೋಥೆರಪಿ ಸೇವೆ ನೀಡುತ್ತಿದ್ದು, ವಿಶ್ವ ಫಿಸಿಯೋಥೆರಪಿ ದಿನದ ಪ್ರಯುಕ್ತ ಈ ದಿನ ರಿಯಾಯಿತಿ ದರದಲ್ಲಿ ಚಿಕಿತ್ಸಾ ಸೌಲಭ್ಯ ನೀಡಲಾಗುತ್ತಿದೆ ಎಂದರು. ಶಿಬಿರದಲ್ಲಿ ನರ ಮತ್ತು ಮೂಳೆಗಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ, ಮಕ್ಕಳಲ್ಲಿ ಕಂಡುಬರುವ ದೈಹಿಕ ತೊಂದರೆಗಳಿಗೆ, ಶಸ್ತ್ರಚಿಕಿತ್ಸೆಯ ಬಳಿಕದ ಫಿಸಿಯೋಥೆರಪಿ ಮತ್ತು ನೋವು ನಿವಾರಣೆಗಳಿಗೆ ಮಾಡಬೇಕಾದ ಫಿಸಿಯೋಥೆರಪಿಗಳನ್ನು ಉಚಿತವಾಗಿ ಮಾಡಲಾಯಿತು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಫಿಸಿಯೋಥೆರಪಿಸ್ಟ್ ತಜ್ಞರಾದ ಸನ್ನಿಧಿ ಜೈನ್ ಮತ್ತು ಪ್ರೀಥಮ್ ಈ ಶಿಬಿರವನ್ನು ನಡೆಸಿಕೊಟ್ಟರು. ಫಿಸಿಯೋಥೆರಪಿ ಸಮಾಲೋಚನೆಯನ್ನು ಉಚಿತವಾಗಿ ಮಾಡಲಾಯಿತು. ಫಿಸಿಯೋಥೆರಪಿ ವಿಧಾನಗಳಿಗೆ 20% ರಿಯಾಯತಿ ನೀಡಲಾಯಿತು.

ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ

Article Image

ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ

ಮೂಡುಬಿದ್ರೆಯ ಎಕ್ಸೆಲೆಂಟ್ ಪ.ಪೂ ಕಾಲೇಜಿನಲ್ಲಿ ನಡೆದ ದಕ್ಷಿಣಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ ಹಾಗೂ ವಾರ್ಷಿಕ ಸಭೆಯಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಮಂಗಳೂರು ಶ್ರೀ ಶಾರದಾ ಪ.ಪೂ ಕಾಲೇಜಿನ ಉಪನ್ಯಾಸಕ ರಮೇಶ್ ಆಚಾರ್ಯ, ಉಪಾಧ್ಯಕ್ಷರಾಗಿ ಮಂಗಳೂರು ಎಕ್ಸಪರ್ಟ್ ಪ.ಪೂ ಕಾಲೇಜಿನ ಶ್ರೀನಿವಾಸ ಮಧ್ಯಸ್ಥ, ಮೂಡುಬಿದ್ರೆ ಆಳ್ವಾಸ್ ಪ.ಪೂ ಕಾಲೇಜಿನ ಅಂಬರೀಷ ಚಿಪ್ಲೂಣಕರ, ಸುರತ್ಕಲ್ ಗೋವಿಂದದಾಸ ಪ.ಪೂ ಕಾಲೇಜಿನ ಪೈಕ ವೆಂಕಟರಮಣ ಭಟ್ ಇವರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಮಂಗಳೂರು ಸೈಂಟ್ ಅಲೋಶಿಯಸ್ ಪ.ಪೂ ಕಾಲೇಜಿನ ಡಾ. ಸುರೇಖಾ ತಂತ್ರಿ, ಜೊತೆ ಕಾರ್ಯದರ್ಶಿಗಳಾಗಿ ಮಂಗಳೂರು ಮ್ಯಾಪ್ಸ್ ಪ.ಪೂ ಕಾಲೇಜಿನ ಶೈಲಜಾ ಹೆಚ್. ಎಸ್., ಮೂಡುಬಿದ್ರೆ ಆಳ್ವಾಸ್ ಪ.ಪೂ ಕಾಲೇಜಿನ ಅನಂತ ಭಟ್, ಕಲ್ಲಡ್ಕದ ಶ್ರೀರಾಮ ಪ.ಪೂ ಕಾಲೇಜಿನ ಮಹೇಂದ್ರ ಭಟ್, ಸಂಘಟನಾ ಕಾರ್ಯದರ್ಶಿಯಾಗಿ ಮೂಡುಬಿದ್ರೆಯ ಎಕ್ಸಲೆಂಟ್ ಪ.ಪೂ ಕಾಲೇಜಿನ ತೇಜಸ್ವಿ ಭಟ್ ಇವರು ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಮಂಗಳೂರಿನ ಡಾ. ಎನ್.ಎಸ್.ಎ.ಎಂ ಪ.ಪೂ ಕಾಲೇಜಿನ ರವಿಶಂಕರ ಹೆಗಡೆ, ರಾಜ್ಯಮಟ್ಟದ ಸಂಘಕ್ಕೆ ಜಿಲ್ಲಾ ಸಂವಹನ ಪ್ರತಿನಿಧಿಯಾಗಿ ಪುತ್ತೂರಿನ ಸರಕಾರಿ ಪ.ಪೂ ಕಾಲೇಜಿನ ಪ್ರಕಾಶ್ ವಿ.ಕೆ. ಆಯ್ಕೆಯಾಗಿದ್ದಾರೆ. ಸಲಹಾ ಸಮಿತಿಯ ಸದಸ್ಯರಾಗಿ ಮಂಗಳೂರು ಬೆಸೆಂಟ್ ಪ.ಪೂ ಕಾಲೇಜಿನ ಅಜಿತಾ, ಮಂಗಳೂರು ಕೆನರಾ ಪ.ಪೂ ಕಾಲೇಜಿನ ಡಾ. ಮಧುಕೇಶ್ವರ ಶಾಸ್ತ್ರಿ, ಮೂಡಬಿದ್ರೆ ಜೈನ್ ಪ.ಪೂ ಕಾಲೇಜಿನ ರಾಮಚಂದ್ರ ಭಟ್, ಅಳಿಕೆ ಸತ್ಯಸಾಯಿ ಲೋಕಸೇವಾ ಪ.ಪೂ ಕಾಲೇಜಿನ ವೆಂಕಟಕೃಷ್ಣ ಶರ್ಮಾ ಇವರು ಆಯ್ಕೆಯಾಗಿದ್ದಾರೆ.

ಸುಲೋಚನಾ ಭಟ್ ನಿಧನ

Article Image

ಸುಲೋಚನಾ ಭಟ್ ನಿಧನ

ಪುತ್ತೂರು, ಆ. 28: ಸ್ವರ್ಣೋದ್ಯಮಿ ಮುಳಿಯ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಭಟ್ (71) ಅವರು ಅಲ್ಪಕಾಲದ ಅಸೌಖ್ಯದಿಂದ ಆ. 28ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತಿ ಮುಳಿಯ ಶ್ಯಾಮ್ ಭಟ್, ಪುತ್ರರಾದ ಮುಳಿಯ ಜುವೆಲ್ಸನ ಸಿಎಂಡಿ ಕೇಶವ ಪ್ರಸಾದ್, ಎಂಡಿ ಕೃಷ್ಣ ನಾರಾಯಣ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಉದ್ಯಮಿಯಾಗಿದ್ದ ಸುಲೋಚನಾ ಅವರು ಲಯನೆಸ್ ಮತ್ತು ರೋಟರಿ ಇನ್ನರ್‌ವೀಲ್ ಕ್ಲಬ್ ಮೂಲಕ ಸಮಾಜಸೇವಕಿಯಾಗಿ ಗುರುತಿಸಿಕೊಂಡಿದ್ದರು. ಮುಳಿಯ ಜುವೆಲ್ಲರ್ಸ್‌ನ ಎಲ್ಲಾ ಶಾಖೆಗಳು ಇಂದು (29 ಆಗಸ್ಟ್ ಶುಕ್ರವಾರ) ಕಾರ್ಯನಿರ್ವಹಿಸುತ್ತಿಲ್ಲ. ಗ್ರಾಹಕರು ಗಮನಿಸಬೇಕಾಗಿ ವಿನಂತಿ.

ಧರ್ಮಸ್ಥಳದಲ್ಲಿ ಜ್ಞಾನಪಥ ಮತ್ತು ಜ್ಞಾನರಥ ಕೃತಿಗಳ ಲೋಕಾರ್ಪಣೆ

Article Image

ಧರ್ಮಸ್ಥಳದಲ್ಲಿ ಜ್ಞಾನಪಥ ಮತ್ತು ಜ್ಞಾನರಥ ಕೃತಿಗಳ ಲೋಕಾರ್ಪಣೆ

ಉಜಿರೆ: ನೈತಿಕಶಿಕ್ಷಣ ಪ್ರಸ್ತುತ ಸಮಾಜಕ್ಕೆ ತುರ್ತು ಅನಿವಾರ್ಯವಾಗಿದ್ದು ಪುಸ್ತಕಗಳು ಸಾರ್ಥಕ ಬದುಕಿಗೆ ದಾರಿದೀಪವಾಗಿವೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ವಿ. ನಾಗೇಂದ್ರ ಪ್ರಸಾದ್ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ಪ್ರಕಟಿಸಿದ “ಜ್ಞಾನಪಥ” ಮತ್ತು “ಜ್ಞಾನರಥ” ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಜ್ಞಾನದೀವಿಗೆಯಾದ ಪುಸ್ತಕಗಳು ಉತ್ತಮ ಹಾಗೂ ಉಪಯುಕ್ತ ಜೀವನ ಸಂಗಾತಿಯಾಗಿದ್ದು, ನೈತಿಕ ಪುಸ್ತಕಗಳಲ್ಲಿರುವ ಲೇಖನಗಳು ಸಾರ್ಥಕ ಬದುಕಿಗೆ ಸ್ಪೂರ್ತಿ ಮತ್ತು ಪ್ರೇರಣೆ ನೀಡುತ್ತವೆ ಎಂದು ಅವರು ಶ್ಲಾಘಿಸಿ ಅಭಿನಂದಿಸಿದರು. ಶ್ರೀ ಮಂಜುನಾಥ ಚಲನಚಿತ್ರ: ತಾನು ಬಾಲ್ಯದಿಂದಲೂ ಧರ್ಮಸ್ಥಳದ ಪರಮ ಭಕ್ತನಾಗಿದ್ದು ಕೆಲವು ವರ್ಷಗಳ ಹಿಂದೆ ಸುಮಾರು ಮೂರು ತಿಂಗಳು ಧರ್ಮಸ್ಥಳ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ವಾಸ್ತವ್ಯ ಇದ್ದು, “ಶ್ರೀ ಮಂಜುನಾಥ” ಚಲನಚಿತ್ರ ನಿರ್ಮಾಣ ಮಾಡಿರುವ ಸವಿನೆನಪನ್ನು ಸ್ಮರಿಸಿದರು. ಧರ್ಮಸ್ಥಳಕ್ಕೆ ಬಂದು ಪ್ರಥಮವಾಗಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು “ಶ್ರೀ ಮಂಜುನಾಥ” ಚಲನಚಿತ್ರ ತಯಾರಿಸುವ ಬಗ್ಗೆ ಅನುಮತಿ ಕೋರಿದಾಗ ಬಹಳ ನಿರೀಕ್ಷೆಯಲ್ಲಿದ್ದ ಅವರಿಗೆ ಆಶ್ಚರ್ಯವಾಯಿತು. ಹೆಗ್ಗಡೆಯವರು ತಕ್ಷಣ ಮಂಜುನಾಥ ದೇವರನ್ನು ವ್ಯಾಪಾರೀಕರಣ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರು. ಆದರೂ ದೇವರನ್ನು ಪ್ರಾರ್ಥಿಸಿ ತನ್ನ ದೃಢಸಂಕಲ್ಪ ನೆರವೇರಿಸಲು ಪ್ರಯತ್ನಿಸಿದರು. ಚಲನಚಿತ್ರ ನಿರ್ಮಾಣಕ್ಕೆ ಭಗೀರಥ ಪ್ರಯತ್ನ ಮಾಡಿದರು. ವಿಶೇಷವಾಗಿ ಜೈನಧರ್ಮದ ಬಗ್ಗೆ ವಿಶೇಷ ಗೌರವ, ಆದರ ಹೊಂದಿದ ಅವರು ಆಳವಾದ ಅಧ್ಯಯನ ಮಾಡಿ ಮಾಹಿತಿ ಕಲೆ ಹಾಕಿದರು. ಕನ್ನಡದ ಆದಿಕವಿ ಪಂಪನಿಂದ ಹಿಡಿದು ರನ್ನ, ಜನ್ನ, ಪೊನ್ನರ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಏಳು ಕೋಟಿ ರೂ. ವೆಚ್ಛದಲ್ಲಿ ತಯಾರಾದ ಚಲನಚಿತ್ರದಲ್ಲಿ ತಾನು ನಷ್ಟ ಅನುಭವಿಸಬೇಕಾಯಿತು ಎಂದು ಸಿಹಿ-ಕಹಿ ಅನುಭವವನ್ನು ನೆನಪಿಸಿಕೊಂಡರು. ಶುಭಾಶಂಸನೆ ಮಾಡಿದ ಚಲನಚಿತ್ರ ನಟ ದತ್ತಣ್ಣ (ದತ್ತಾತ್ರೇಯ ಎಚ್.ಡಿ.) ಮನೆಯ ವಾತಾವರಣದಿಂದಲೇ ಉತ್ತಮ ಸಂಸ್ಕಾರ ಮೂಡಿ ಬರಬೇಕು. ಜೀವ ದೊಡ್ಡದಲ್ಲ, ಜೀವನ ದೊಡ್ಡದು. ಮೊದಲು ನಾವು ಯಾರು ಎಂಬುದನ್ನು ಅರಿತುಕೊಂಡು, ನವಚೈತನ್ಯವನ್ನು ಹೊಂದಬೇಕು. ಸಜ್ಜನರ ಸತ್ಸಂಗ ಹಾಗೂ ಉತ್ತಮ ಪುಸ್ತಕಗಳನ್ನು ಓದುವುದರಿಂದ ಮಾನವೀಯ ಮೌಲ್ಯಗಳೊಂದಿಗೆ ಉತ್ತಮ ಸಂಸ್ಕಾರ ಮೂಡಿಬರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ವಿದ್ಯಾರ್ಥಿಗಳು ದೇಶದ ಮುಂದಿನ ಜನಾಂಗವಾಗಿದ್ದು ಅವರ ಉಜ್ವಲ ಭವಿಷ್ಯ ರೂಪಿಸಲಿಕ್ಕಾಗಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಸ್ವಾಮಿ ವಿವೇಕಾನಂದರಂತೆ ಓದಿದ ಪುಸ್ತಕದ ಅನುಭವವನ್ನು ಬದುಕಿನಲ್ಲಿ ಅಳವಡಿಸಿದಾಗ ಜೀವನ ಪಾವನವಾಗುತ್ತದೆ. ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ವಿದ್ಯಾರ್ಥಿಗಳು ದುಶ್ಚಟದಿಂದ ದೂರವಿದ್ದು ಸಮಾಜದ ಅಮೂಲ್ಯ ಆಸ್ತಿಯಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಹೆಗ್ಗಡೆಯವರು ಹೇಳಿದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ನೀಡಲಾಯಿತು. ಶಾರದಾಮಣಿಶೇಖರ್ ನೇತೃತ್ವದಲ್ಲಿ ಮಂಗಳೂರಿನ ಸನಾತನ ನಾಟ್ಯಾಲಯದ ಕಲಾವಿದರಿಂದ ಸುಶ್ರಾವ್ಯ ಗಾಯನ ಮತ್ತು ನೃತ್ಯ ಪ್ರದರ್ಶನ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು. ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಡಿತ್ತಾಯ ಧನ್ಯವಾದವಿತ್ತರು. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಶಶಿಕಾಂತ ಜೈನ್ ಸ್ವಾಗತಿಸಿದರು. ಪುದುವೆಟ್ಟು ಶಾಲಾ ಶಿಕ್ಷಕ ನಿಶಾಂತ್ ಕಾರ್ಯಕ್ರಮ ನಿರ್ವಹಿಸಿದರು.

ಸಂಸ್ಕೃತಿ ಪರಂಪರೆಯ ಬೇರು ಸಂಸ್ಕೃತ - ಯುವರಾಜ ಜೈನ್

Article Image

ಸಂಸ್ಕೃತಿ ಪರಂಪರೆಯ ಬೇರು ಸಂಸ್ಕೃತ - ಯುವರಾಜ ಜೈನ್

ನಮ್ಮ ಭಾರತೀಯ ಸಂಸ್ಕೃತಿಯ ಗಾಢವಾದ ಬೇರು ಸಂಸ್ಕೃತ ಭಾಷೆಯಲ್ಲಿ ಅಡಕವಾಗಿದೆ. ಸಂಸ್ಕೃತವು ಕೇವಲ ಒಂದು ಭಾಷೆಯಲ್ಲ, ಅದು ನಾಡಿನ ಸಂಸ್ಕೃತಿ, ತತ್ತ್ವ, ಧರ್ಮ, ಸಾಹಿತ್ಯ, ಕಲೆ ಮತ್ತು ಜ್ಞಾನದ ನಿರಂತರ ಪ್ರಕಾಶ. ಇಂದು ನಾವು ಕಾಣುತ್ತಿರುವ ಜೀವನಮೌಲ್ಯಗಳು, ಶಿಷ್ಟಾಚಾರಗಳು, ಶ್ರೀಮಂತ ಕಲೆಗಳು, ಜ್ಞಾನದ ಹರವುಗಳೆಲ್ಲ ಸಂಸ್ಕೃತ ಸಾಹಿತ್ಯದಲ್ಲಿ ನೆಲೆ ನಿಂತಿವೆ. ಸಂಸ್ಕೃತ ಅಧ್ಯಯನ ಮಾಡಿದರೆ ನಾವೇ ನಮ್ಮ ಮೂಲಗಳಿಗೆ ಹತ್ತಿರವಾಗುತ್ತೇವೆ, ಜಗತ್ತಿನೊಂದಿಗೆ ನಿಂತು ಮಾತನಾಡುವ ಶಕ್ತಿಯನ್ನು ಪಡೆಯುತ್ತೇವೆ ಎಂದು ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ್ ಅಭಿಪ್ರಾಯಪಟ್ಟರು. ಅವರು ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಸಂಸ್ಕೃತ ಉಪನ್ಯಾಸಕರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಪ್ರಾಂಶುಪಾಲರ ಸಂಘ ಹಾಗೂ ಎಕ್ಸಲೆಂಟ್ ಪದವಿಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ  ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ ಸಂಸ್ಕೃತ ಭಾಷಾ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರವನ್ನು  ಉದ್ಘಾಟಿಸಿ ಮಾತನಾಡಿದರು. ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದ ಹಿರಿಯ ವಿದ್ವಾಂಸರು ಮಂಗಳೂರಿನ ವಾಸುದೇವ ಕಾರಂತರು ಮಾತನಾಡುತ್ತ ಗುರು ಎಂದರೆ ಕೇವಲ ಪಾಠ ಹೇಳುವವನು ಮಾತ್ರವಲ್ಲ. ಆತನು ವಿಷಯದಲ್ಲಿ ಆಳವಾದ ಜ್ಞಾನವನ್ನು ಹೊಂದಿರಬೇಕು. ಜ್ಞಾನವು ಕೇವಲ ಪುಸ್ತಕಗಳಲ್ಲಿ ಸೀಮಿತವಾಗದೆ, ಜೀವನದ ವಿವಿಧ ಕ್ಷೇತ್ರಗಳಲ್ಲಿ ಆಳವಾಗಿ ಅರ್ಥೈಸಿದಾಗ ಮಾತ್ರ ಅದು ಶಿಷ್ಯನಿಗೆ ಮಾರ್ಗದರ್ಶಕವಾಗುತ್ತದೆ. ನಿಜವಾದ ಗುರುವು ಸದಾ ಶಿಷ್ಯನ ಹಿತವನ್ನು ಮನಸ್ಸಿನಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತಾನೆ. ವಿದ್ಯಾರ್ಥಿಯ ಮನಸ್ಸು ಅನೇಕ ವಿಚಾರಗಳಲ್ಲಿ ಅಲೆದಾಡುವುದು ಸಹಜ. ಇಂತಹ ಸಂದರ್ಭದಲ್ಲಿ ಶಿಷ್ಯನ ವಿಕ್ಷಿಪ್ತ ಮನಸ್ಸನ್ನು ನಿರ್ದಿಷ್ಟ ವಿಷಯದಲ್ಲಿ ನೆಲೆಗೊಳಿಸಿ, ಅಧ್ಯಯನದಲ್ಲಿ ಏಕಾಗ್ರತೆಯನ್ನು ಹುಟ್ಟಿಸುವುದು ಗುರುವಿನ ದೊಡ್ಡ ಹೊಣೆಗಾರಿಕೆ. ಇಂತಹ ಕಾರ್ಯವನ್ನು ನೆರವೇರಿಸಲು ಗುರುವು ಶಾಂತಿ, ಸಹನೆ ಮತ್ತು ತಾಳ್ಮೆಯನ್ನು ಹೊಂದಿರಬೇಕು ಎಂದು ಹಿತವಚನ ನುಡಿದರು. ಇದೇ ಸಂದರ್ಭದಲ್ಲಿ ಕಳೆದ ವರ್ಷ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಸಂಸ್ಕೃತದಲ್ಲಿ 100 ಅಂಕ ಗಳಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳಲ್ಲಿ ಅತ್ಯಧಿಕ ಅಂಕವನ್ನು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷ ರಮೇಶ ಆಚಾರ್ಯ ಸ್ವಾಗತಿಸಿ, ಉಪಾಧ್ಯಕ್ಷ ಡಾ. ಪ್ರಸನ್ನ ಕುಮಾರ್ ಐತಾಳ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮ ಸಂಯೋಜಕ ತೇಜಸ್ವೀ ಭಟ್ ನಿರೂಪಿಸಿ ಸಂಘದ ಕಾರ್ಯದರ್ಶೀ ಡಾ. ಮಧುಕೇಶ್ವರ ಶಾಸ್ತ್ರೀ ವಂದಿಸಿದರು.

First Previous

Showing 1 of 6 pages

Next Last